ಬಸವಕಲ್ಯಾಣ: ‘ಜೆಡಿಎಸ್ ಅಭ್ಯರ್ಥಿ ಯಸ್ರಬ್ ಅಲಿ ಖಾದ್ರಿ ದೈವಭಕ್ತನಾಗಿದ್ದು, ಮೋಸ ಮಾಡಲಾರ. ಆದ್ದರಿಂದ ಅವರನ್ನು ಚುನಾವಣೆಯಲ್ಲಿ ಗೆಲ್ಲಿಸಬೇಕು’ ಎಂದು ಶಾಸಕ ಬಂಡೆಪ್ಪ ಕಾಶೆಂಪೂರ್ ಹೇಳಿದರು.
ಇಲ್ಲಿನ ಆಟೊನಗರದಲ್ಲಿ ಉಪ ಚುನಾವಣೆ ಅಂಗವಾಗಿ ಭಾನುವಾರ ಆಯೋಜಿಸಿದ್ದ ಜೆಡಿಎಸ್ ಅಭ್ಯರ್ಥಿ ಯಸ್ರಬ್ ಅಲಿ ಖಾದ್ರಿ ಅವರ ಪ್ರಚಾರ ಸಭೆಯಲ್ಲಿ ಮಾತನಾಡಿದರು.
‘ಪಕ್ಷದಿಂದ ಉತ್ತಮ ವ್ಯಕ್ತಿಯನ್ನು ಆಯ್ಕೆ ಮಾಡಿ ಟಿಕೆಟ್ ನೀಡಲಾಗಿದೆ. ಅಲ್ಲದೇ, ಇವರು ಸ್ಥಳೀಯರು. ಸಾಕಷ್ಟು ಸಾಮಾಜಿಕ ಕಾರ್ಯಗಳಲ್ಲಿ ಪಾಲ್ಗೊಂಡಿದ್ದು ಜನರ ಕಷ್ಟ– ಸುಖಗಳಿಗೆ ಸ್ಪಂದಿಸುತ್ತಾರೆ’ ಎಂದರು.
ಅಭ್ಯರ್ಥಿ ಸೈಯದ್ ಯಸ್ರಬ್ ಅಲಿ ಖಾದ್ರಿ ಮಾತನಾಡಿ, ‘ನಾನು ಸ್ಥಳೀಯನಾಗಿದ್ದು ನೀವು ಈ ಹಿಂದೆ ಅನೇಕರಿಗೆ ಮತ ನೀಡಿ ಅಧಿಕಾರ ಕೊಟ್ಟಿದ್ದೀರಿ. ಈ ಬಾರಿ ನನಗೆ ಮತ ನೀಡುವ ಮೂಲಕ ನಿಮ್ಮ ಸೇವೆ ಮಾಡುವ ಅವಕಾಶ ಕಲ್ಪಿಸಿ ಕೊಡಿ’ ಎಂದು ಮನವಿ ಮಾಡಿದರು.
ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ಶಬ್ಬೀರ್ ಪಾಶಾ ಮುಜಾವರ್, ಪ್ರವಕ್ತಾ ಆಕಾಶ ಖಂಡಾಳೆ, ನಗರ ಘಟಕದ ಅಧ್ಯಕ್ಷ ಸುಶೀಲ ಆವಸ್ಥಿ ಪಾಲ್ಗೊಂಡಿದ್ದರು.