ಬೀದರ್: ಇಲ್ಲಿಯ ಬ್ರಿಮ್ಸ್ ಆಸ್ಪತ್ರೆ ಎದುರು ಕರ್ನಾಟಕ ದಲಿತ ರಕ್ಷಣಾ ವೇದಿಕೆ ಮುಂದಾಳತ್ವದಲ್ಲಿ ಆಸ್ಪತ್ರೆ ಮಹಿಳಾ ಸ್ವಚ್ಛತಾ ಸಿಬ್ಬಂದಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಸ್ಥಳಕ್ಕೆ ಬೀದರ್ ದಕ್ಷಿಣ ಶಾಸಕ ಬಂಡೆಪ್ಪ ಕಾಶೆಂಪುರ ಶನಿವಾರ ಭೇಟಿ ನೀಡಿದರು.
ಯಾವುದೇ ಮುನ್ಸೂಚನೆ ನೀಡದೆ ಟೆಂಡರ್ ರದ್ದುಪಡಿಸಿ, ಬ್ರಿಮ್ಸ್ ಬೋಧಕ ಆಸ್ಪತ್ರೆಯ 80 ಮಹಿಳಾ ಸ್ವಚ್ಛತಾ ಸಿಬ್ಬಂದಿ ಹಾಗೂ 16 ಮಂದಿ ನೈರ್ಮಲ್ಯ ಸಿಬ್ಬಂದಿಯನ್ನು ಕೆಲಸದಿಂದ ತೆಗೆದು ಹಾಕಲಾಗಿದೆ ಎಂದು ಮಹಿಳಾ ಸ್ವಚ್ಛತಾ ಸಿಬ್ಬಂದಿ ಶಾಸಕರ ಮುಂದೆ ಅಳಲು ತೋಡಿಕೊಂಡರು.
ಜಿಲ್ಲಾ ಕಾರ್ಮಿಕ ವಿವಿಧೊದ್ದೇಶ ಸಹಕಾರ ಸಂಘದ ಮೂಲಕ ಸೇವೆ ಮುಂದುವರಿಸಬೇಕು ಎಂದು ಮನವಿ ಮಾಡಿದರು. ಸಂಬಂಧಿಸಿದ ಅಧಿಕಾರಿಗೆ ದೂರವಾಣಿ ಕರೆ ಮಾಡಿದ ಶಾಸಕರು ಕೂಡಲೇ ಸ್ವಚ್ಛತಾ ಸಿಬ್ಬಂದಿಯ ಸಮಸ್ಯೆ ಪರಿಹರಿಸಬೇಕು ಎಂದು ನಿರ್ದೇಶನ ನೀಡಿದರು.