ಬೀದರ್: ರಸಪ್ರಶ್ನೆ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಅಧಿಕ ಅಂಕ ಗಳಿಸಲು ನೆರವಾಗಲಿವೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಗಂಗಣ್ಣ ಸ್ವಾಮಿ ನುಡಿದರು.
ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಇಲ್ಲಿಯ ಆಗಸ್ತ್ಯ ಫೌಂಡೇಶನ್ ಕೋರ್ ವಿಜ್ಞಾನ ಚಟುವಟಿಕಾ ಕೇಂದ್ರದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಸಿ.ವಿ. ರಾಮನ್ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕೇಂದ್ರವು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವ ಕೆಲಸ ಮಾಡುತ್ತಿದೆ ಎಂದು ಕಾರ್ಯಕ್ರಮ ಉದ್ಘಾಟಿಸಿದ ಕಲ್ಯಾಣ ಕರ್ನಾಟಕ ಪ್ರತಿಷ್ಠಾನದ ಅಧ್ಯಕ್ಷ ಬಸವಕುಮಾರ ಪಾಟೀಲ ಹೇಳಿದರು.
ಸಮಗ್ರ ಶಿಕ್ಷಣ ಕರ್ನಾಟಕದ ಉಪ ಸಮನ್ವಯಾಧಿಕಾರಿ ಗುಂಡಪ್ಪ ಹುಡುಗೆ, ಜಿಲ್ಲಾ ಉಸ್ತುವಾರಿ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಶಿವಕುಮಾರ ಕಟ್ಟೆ, ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಟಿ.ಆರ್. ದೊಡ್ಡೆ, ಬಿ.ವಿ.ಬಿ. ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ವಿಠ್ಠಲರೆಡ್ಡಿ ಮಾತನಾಡಿದರು.
ರಾಜ್ಯ ವಿಜ್ಞಾನ ಪರಿಷತ್ ಕಾರ್ಯಕಾರಿಣಿ ಸದಸ್ಯ ಪ್ರಕಾಶ ಲಕ್ಕಶೆಟ್ಟಿ, ಶಿಕ್ಷಕ ಪಾಂಡುರಂಗ ಬೆಲ್ದಾರ್, ಪ್ರಭು ಗಂಗೂರ್, ಸಿದ್ದಾರೆಡ್ಡಿ ನಾಗೂರೆ, ಅನಿಲ್ ಶಿರಮುಂಡಿ ಉಪಸ್ಥಿತರಿದ್ದರು. ಕೇಂದ್ರದ ಮುಖ್ಯಸ್ಥ ಡಾ. ಬಾಬುರಾವ್ ಎನ್.ಎಸ್. ವಂದಿಸಿದರು.