ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲೆಯ ಅಧಿಕಾರಿಗಳಲ್ಲಿ ಕಾಯಕ ಪ್ರವೃತ್ತಿ ಇಲ್ಲ: ಸಚಿವ ಕೋಟ ಶ್ರೀ‌ನಿವಾಸ ಪೂಜಾರಿ

Last Updated 29 ಸೆಪ್ಟೆಂಬರ್ 2021, 15:23 IST
ಅಕ್ಷರ ಗಾತ್ರ

ಬೀದರ್: ‘ಜಿಲ್ಲೆಯ ಅಧಿಕಾರಿಗಳಲ್ಲಿ ಕಾಯಕ ಪ್ರವೃತ್ತಿ ಇಲ್ಲ. ಎರಡು ವರ್ಷಗಳ ಹಿಂದೆ ಬಿಡುಗಡೆಯಾದ ಅನುದಾನ ಬಳಸಿಲ್ಲ. ಮೂರು ವರ್ಷ ಕಳೆದರೂ ಕೆಲ ಕಾಮಗಾರಿಗಳನ್ನೇ ಆರಂಭಿಸಿಲ್ಲ. ಜಿಲ್ಲಾ ಪಂಚಾಯಿತಿ ಸಿಇಒ ಸರಿಯಾಗಿ ಪ್ರಗತಿ ಪರಿಶೀಲನೆ ನಡೆಸಿಲ್ಲ. ಅಧಿಕಾರಿಗಳು ಸಭೆಗೆ ಸಿದ್ಧತೆಯನ್ನೂ ಮಾಡಿಕೊಂಡು ಬಂದಿಲ್ಲ. ಹೀಗಾದರೆ ಪ್ರಗತಿ ಸಾಧ್ಯವಿಲ್ಲ’ ಎಂದು ಸಮಾಜ ‌ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟಾ ಶ್ರೀ‌ನಿವಾಸ ಪೂಜಾರಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಇಲ್ಲಿಯ ಜಿಲ್ಲಾ ಪಂಚಾಯಿತಿಯಲ್ಲಿ ಬುಧವಾರ ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್‌ಸಿಪಿ), ಪರಿಶಿಷ್ಟ ಪಂಗಡಗಳ ಉಪ ಯೋಜನೆ (ಟಿಎಸ್‌ಪಿ), ಸಮಾಜ ‌ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಇಲಾಖೆ ಅಧಿಕಾರಿಗಳ ಕಾರ್ಯವೈಖರಿಯ ಬಗೆಗೆ ಅವರು ಬೇಸರ ಹೊರ ಹಾಕಿದರು.

‘ಮುಂಚಿತವಾಗಿ ಸಭೆಯ ಮಾಹಿತಿ ನೀಡಿ ಬಂದರೂ ಅಧಿಕಾರಿಗಳು ಸಭೆಗೆ ಹಾಗೇ ಬಂದಿದ್ದಾರೆ. ಲಿಖಿತವಾಗಿ ನೀಡಿರುವ ದಾಖಲೆಯಲ್ಲಿ ಹಣ ಬಳಕೆಯ ಮಾಹಿತಿ ಉಲ್ಲೇಖಿಸಿಲ್ಲ. ವಿವರಣೆ ಕೊಡುವಾಗ ಇನ್ನೊಂದು ಹೇಳುತ್ತಿದ್ದಾರೆ. ಒಟ್ಟಾರೆ ಗೊಂದಲ ಮೂಡಿಸಿದ್ದಾರೆ’ ಎಂದರು.

ಡಾ.ಬಿ.ಆರ್.ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಅಧಿಕಾರಿಗಳು ಗಂಗಾ ಕಲ್ಯಾಣ ಯೋಜನೆಯಲ್ಲಿ 2018-2019ರಲ್ಲಿ 148 ಕಾಮಗಾರಿಗಳ ಪೈಕಿ 126 ಮುಗಿದಿವೆ. ಮೂರು ಕಾಮಗಾರಿ ಇನ್ನೂ ಆರಂಭವಾಗಿಲ್ಲ. ಉಳಿದವು ಪ್ರಗತಿಯಲ್ಲಿವೆ ಎಂದು ಮಾಹಿತಿ ಕೊಟ್ಟಿದ್ದಾರೆ. ಮೂರು ವರ್ಷಗಳಾದರೂ ಕಾಮಗಾರಿ ಆರಂಭಿಸದಿದ್ದರೆ ಹೇಗೆ’ ಎಂದು ಪ್ರಶ್ನಿಸಿದರು.

‘ವಿದ್ಯಾರ್ಥಿ ವಸತಿ ನಿಲಯಗಳಿಗೆ ಟೆಂಡರ್‌ ಪಡೆದವರೇ ಗುಣಮಟ್ಟದ ಆಹಾರ ಪೂರೈಕೆ ಮಾಡಬೇಕು. ಬೇರೊಬ್ಬರು ಆಹಾರ ಪೂರೈಕೆ ಮಾಡಿದರೆ ಒಂದು ನಿಮಿಷವೂ ಸಹಿಸಿಕೊಳ್ಳುವುದಿಲ್ಲ. ಕೆಲಸದ ವಿಷಯದಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು.

‘ಜಿಲ್ಲೆಯಲ್ಲಿ ಮುಖ್ಯಮಂತ್ರಿ ಹಾಗೂ ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಯೂ ಆರಂಭವಾಗಿಲ್ಲ. 10 ಅಂಬೇಡ್ಕರ್‌ ಸಮದಾಯ ಭವನ ಕಾಮಗಾರಿ ಪೂರ್ಣಗೊಂಡಿಲ್ಲ. 31 ಬಾಬು ಜಗಜೀವನರಾಮ ಭವನಗಳು ಮಂಜೂರಾದರೂ ಕೆಲವು ಭವನಗಳಿಗೆ ಜಾಗ ಇಲ್ಲ ಎಂದು ಹೇಳುತ್ತಿದ್ದಾರೆ. ಶಾಸಕರನ್ನು ಭೇಟಿ ಮಾಡಿ ಪರಿಹಾರ ಕಂಡುಕೊಳ್ಳಬೇಕಿತ್ತು. ಆದರೆ, ಅಧಿಕಾರಿಗಳಲ್ಲಿ ಕೆಲಸ ಮಾಡುವ ಮಾನಸಿಕತೆಯೇ ಇಲ್ಲ’ ಎಂದರು.

‘ಎಸ್‌ಸಿಪಿ, ಟಿಎಸ್‌ಪಿ ಸಭೆಯಲ್ಲಿ ಅಧಿಕಾರಿಗಳು ಕೆಲಸ ಮಾಡದೆ ಸುಳ್ಳು ಮಾಹಿತಿ ನೀಡಿದ್ದಾರೆ. ಸಮಿತಿ ರಚಿಸಿ ತನಿಖೆ ನಡೆಸಬೇಕು. ಪರಿಶಿಷ್ಟರ ಅನುದಾನ ಬಳಕೆಗೆ ನಿರ್ಲಕ್ಷ್ಯ ತೋರುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಬೇಕು’ ಎಂದು ವಿಧಾನ ಪರಿಷತ್‌ ಸದಸ್ಯ ಅರವಿಂದಕುಮಾರ ಅರಳಿ ಒತ್ತಾಯಿಸಿದರು.

ಗುರುವಾರ ಬೆಂಗಳೂರಲ್ಲಿ ಸಭೆ

ಬೆಂಗಳೂರಲ್ಲಿ ಸೆ.30 ರಂದು ಅಧಿಕಾರಿಗಳ ಸಭೆ ನಡೆಸಿ ಅನುದಾನ ಹಾಗೂ ಶಿಷ್ಯ ವೇತನ ಬಿಡುಗಡೆ ವಿಳಂಬವಾಗಿರುವ ಕುರಿತು ಮಾಹಿತಿ ಪಡೆಯಲಾಗುವುದು ಎಂದು ಸಚಿವ ಶ್ರೀನಿವಾಸ ಪೂಜಾರಿ ಹೇಳಿದರು.

ಎರಡು ವರ್ಷಗಳಿಂದ ಎಂಜಿನಿಯರಿಂಗ್ ಹಾಗೂ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಬಿಡುಗಡೆಯಾಗದಿರುವ ದೂರುಗಳು ಬಂದಿವೆ. ಹೀಗಾಗಿ ಆಯಾ ಜಿಲ್ಲಾವಾರು ಸಮಗ್ರ ಮಾಹಿತಿ ತರಿಸಿಕೊಳ್ಳಲಾಗುವುದು. ಸಭೆಯಲ್ಲಿ ಸಮಗ್ರ ಚರ್ಚಿಸಲಾಗುವುದು ಎಂದು ತಿಳಿಸಿದರು.

ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 120 ಕ್ಷೇತ್ರಗಳಿಗೆ ₹ 420 ಕೋಟಿ ಬಿಡುಗಡೆ ಮಾಡಲಾಗಿದೆ ಎಂದರು.

ಮೂವರಿಗೆ ನೋಟಿಸ್

ಸಭೆಗೆ ಹಾಜರಾಗದ ಪಶು ಸಂಗೋಪನೆ ಇಲಾಖೆಯ ಉಪ ನಿರ್ದೇಶಕ, ಬ್ರಿಮ್ಸ್ ವೈದ್ಯಕೀಯ ನಿರ್ದೇಶಕ, ಕಾರಂಜಾ ಯೋಜನೆ ಕಾರ್ಯನಿರ್ವಾಹಕ ಎಂಜಿನಿಯರ್‌ಗೆ ಶೋಕಾಸ್ ನೋಟಿಸ್ ನೀಡಬೇಕು ಎಂದು ಸಚಿವರು ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದರು.
ಮುಂಚಿತವಾಗಿ ಮಾಹಿತಿ ನೀಡಿದರೂ ಕೆಳಹಂತದ ಅಧಿಕಾರಿಗಳನ್ನು ಸಭೆಗೆ ಕಳಿಸಿದ್ದಾರೆ. ನೋಟಿಸ್‌ಗೆ ಅವರು ಕೊಡುವ ಉತ್ತರ ಸಮರ್ಪಕವಾಗಿರದಿದ್ದರೆ ಶಿಸ್ತುಕ್ರಮ ಜರುಗಿಸಬೇಕು ಎಂದು ಸ್ಥಳದಲ್ಲೇ ಆದೇಶ ನೀಡಿದರು.

ವಿಧಾನ ಪರಿಷತ್ ಸದಸ್ಯ ರಘುನಾಥ್ ಮಲ್ಕಾಪೂರೆ, ಶಾಸಕ ರಹೀಮ್ ಖಾನ್, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಿರಿಯ ಸಲಹೆಗಾರ ವೆಂಕಟಯ್ಯ, ಎಸ್‌ಸಿಪಿ, ಟಿಎಸ್‌ಪಿ ನಿರ್ದೇಶಕಿ ಉರ್ಮಿಳಾ, ಜಿಲ್ಲಾಧಿಕಾರಿ ರಾಮಚಂದ್ರನ್ ಆರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಹೀರಾ ನಸೀಮ್, ಪೋಲಿಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್. ಬೀದರ್ ಉಪ ವಿಭಾಗಾಧಿಕಾರಿ ಗರಿಮಾ ಪನ್ವಾರ್, ಬಸವಕಲ್ಯಾಣ ಉಪ ವಿಭಾಗಾಧಿಕಾರಿ ಭುವನೇಶ ಪಾಟೀಲ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ಪರಿಶಿಷ್ಟರಿಗೆ ಅನ್ಯಾಯ

ಬೀದರ್‌: ಎಂಜಿನಿಯರಿಂಗ್‌ ಸೇರಿದಂತೆ ಪದವಿ ವಿದ್ಯಾರ್ಥಿಗಳಿಗೆ ಎರಡು ವರ್ಷಗಳಿಂದ ಶಿಷ್ಯವೇತನ ಬಿಡುಗಡೆ ಮಾಡಿಲ್ಲ. ಇದರಿಂದ ವಿದ್ಯಾರ್ಥಿಗಳು ಸಂಕಷ್ಟಕ್ಕೊಳಗಾಗಿದ್ದಾರೆ. ಕಾಲೇಜುಗಳು ಅನಿವಾರ್ಯವಾಗಿ ವಿದ್ಯಾರ್ಥಿಗಳಿಂದ ಶುಲ್ಕ ಭರಿಸಿಕೊಳ್ಳುವಂತಹ ಸ್ಥಿತಿ ನಿರ್ಮಾಣವಾಗಿದೆ’ ಎಂದು ಶಾಸಕ ಈಶ್ವರ ಖಂಡ್ರೆ ಆರೋಪಿಸಿದರು.

ಆಡಳಿತ ಮಂಡಳಿ ಸೀಟ್‌ ಪಡೆದ ವಿದ್ಯಾರ್ಥಿಯ ಶುಲ್ಕ ಪಾವತಿಸುವುದಿಲ್ಲ ಎಂದು ಹೊರಡಿಸಿರುವ ಆದೇಶ ರದ್ದುಪಡಿಸಬೇಕು. ತಾರತಮ್ಯ ಮಾಡದೆ ಪದವಿ ಕಾಲೇಜು ವಿದ್ಯಾರ್ಥಿಗಳ ಎರಡು ವರ್ಷದ ಶಿಷ್ಯವೇತನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಮುಖ್ಯಮಂತ್ರಿ ಗ್ರಾಮ ಸಡಕ್‌ ಯೋಜನೆ ಹಾಗೂ ಮಾದರಿ ಗ್ರಾಮ ಯೋಜನೆ ಹಳ್ಳ ಹಿಡಿದಿವೆ. ಸರ್ಕಾರ ₹ 1 ಕೋಟಿ ಬಿಡುಗಡೆ ಮಾಡಿ ಒಂದು ವರ್ಷ ಆಗಿದೆ. ಅಧಿಕಾರಿಗಳು ಕಾಮಗಾರಿ ಆರಂಭಿಸಿಲ್ಲ ಎಂದು ಭಾಲ್ಕಿ ಶಾಸಕ ಈಶ್ವರ ಖಂಡ್ರೆ ಸಚಿವರ ಗಮನಕ್ಕೆ ತಂದರು.

ಜಿಲ್ಲಾ ಪಂಚಾಯಿತಿಯಲ್ಲಿ ಕೋಟ್ಯಂತರ ರೂಪಾಯಿ ಕೊಳೆಯುತ್ತಿದೆ. ಜಿಲ್ಲಾ ಮಟ್ಟ, ಕಲಬುರ್ಗಿ ವಿಭಾಗ ಮಟ್ಟ ಹಾಗೂ ರಾಜ್ಯ ಮಟ್ಟದಲ್ಲಿಯೂ ಪ್ರಗತಿ ಪರಿಶೀಲನೆ ನಡೆಯುತ್ತಿಲ್ಲ. ವಸತಿ ಯೋಜನೆ ಫಲಾನುಭವಿಗಳಿಗೆ ಎರಡು ವರ್ಷಗಳಿಂದ ಹಣ ಬಿಡುಗಡೆ ಮಾಡಿಲ್ಲ. ನಗರಸಭೆಯಲ್ಲಿ ಎಂಜಿನಿಯರ್‌ಗಳ ಹುದ್ದೆ ಖಾಲಿ ಕಾರಣ ಅಭಿವೃದ್ಧಿ ಕಾಮಗಾರಿಗಳನ್ನೇ ಆರಂಭಿಸಿಲ್ಲ. ಗಂಗಾ ಕಲ್ಯಾಣ ಯೋಜನೆ ಫಲಾನುಭವಿಗಳ ಕೊಳವೆಬಾವಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಿಲ್ಲ' ಎಂದು ಹೇಳಿದರು.

ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಪರಿಶಿಷ್ಟರಿಗೆ ಕೊಡಲಾಗುತ್ತಿದ್ದ ವಾಹನಗಳನ್ನು ಎರಡು ವರ್ಷಗಳಿಂದ ಕೊಟ್ಟಿಲ್ಲ. ಪಶು ಭಾಗ್ಯ ಯೋಜನೆಯಲ್ಲಿ 200 ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ. ಆದರೆ, ಅವರಿಗೆ ಬ್ಯಾಂಕ್‌ಗಳು ಸಾಲ ಕೊಡುತ್ತಿಲ್ಲ. ಅಧಿಕಾರಿಗಳು ಸಭೆ ನಡೆಸಿ ಸಾಲಕೊಡಿಸುವ ವ್ಯವಸ್ಥೆ ಮಾಡಿಲ್ಲ’ ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT