ಬೀದರ್: ‘ಬೀದರ್ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ (ಬಿಡಿಸಿಸಿ) ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ ದಾಳಿಗೂ ನನಗೂ ಯಾವುದೇ ಸಂಬಂಧವಿಲ್ಲ’ ಎಂದು ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಸ್ಪಷ್ಟಪಡಿಸಿದರು.
ನಗರದಲ್ಲಿ ಮಂಗಳವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿ ಮಾತನಾಡಿದ ಅವರು,‘ಇಡಿ, ಸಿಬಿಐ ಸ್ವಾಯತ್ತ ಸಂಸ್ಥೆಗಳಾಗಿವೆ. ಯಾರು ಉಪ್ಪು ತಿನ್ನುತ್ತಾರೆ. ಅವರು ನೀರು ಕುಡಿಯಲೇಬೇಕು. ನನ್ನ ಮನೆಗೆ ಅಥವಾ ನಿಮ್ಮ ಮನೆಗೆ ಯಾರಾದರೂ ರೇಡ್ ಏಕೆ ಮಾಡಿಲ್ಲ’ ಎಂದು ಪತ್ರಕರ್ತರನ್ನೇ ಪ್ರಶ್ನಿಸಿದರು.
ಚುನಾವಣೆ ಸಂದರ್ಭದಲ್ಲಿ ದಾಳಿ ನಡೆಸಲಾಗುತ್ತಿದೆ ಎಂದು ಆರೋಪಿಸಲಾಗುತ್ತಿದೆ. ಭ್ರಷ್ಟಾಚಾರಿಗಳನ್ನು ಒಳಗೆ ಹಾಕಿದರೆ ಒಳ್ಳೆಯದೋ ಅಥವಾ ಕೆಟ್ಟದೋ ನೀವೇ ಹೇಳಬೇಕು. ಏನಾದರೂ ಅನುಮಾನ ಅಥವಾ ಮಾಹಿತಿ ಆಧರಿಸಿಯೇ ಇಡಿಯವರು ಡಿಸಿಸಿ ಬ್ಯಾಂಕ್ ಮೇಲೆ ದಾಳಿ ನಡೆಸಿರಬಹುದು ಎಂದರು.
ಡಿಸಿಸಿ ಬ್ಯಾಂಕ್, ಎಂಜಿಎಸ್ಎಸ್ಕೆ ಹಾಗೂ ಸಚಿವ ಈಶ್ವರ ಬಿ.ಖಂಡ್ರೆಯವರ ಒಡೆತನದ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗೆ ಕಡಿವಾಣ ಹಾಕಬೇಕು. ಏಕೆಂದರೆ ಚುನಾವಣೆಯಲ್ಲಿ ಅಧಿಕಾರ ದುರ್ಬಳಕೆ ಮಾಡಿಕೊಳ್ಳುವ ಸಾಧ್ಯತೆ ಇರುತ್ತದೆ. ಈ ಕುರಿತು ಜಿಲ್ಲಾಧಿಕಾರಿಗೆ ದೂರು ಕೊಟ್ಟಿದ್ದೆ. ಆದರೆ, ಇಡಿಗೆ ದೂರು ಕೊಟ್ಟಿಲ್ಲ ಎಂದು ಸ್ಪಷ್ಟಪಡಿಸಿದರು.
ಕಾಂಗ್ರೆಸ್ ಸರ್ಕಾರದ ಐದು ಮೋಸದ ಗ್ಯಾರಂಟಿಗಳಿಗೆ ಜನ ಮೋಸ ಹೋಗಿದ್ದಾರೆ. ಅಭಿವೃದ್ಧಿ ಕುಂಠಿತಗೊಂಡಿದೆ. ರೈತರು ಕಂಗಾಲಾಗಿದ್ದಾರೆ. ಇಂತಹ ಮೋಸದ ಪಕ್ಷದ ಪ್ರಣಾಳಿಕೆ ಸಂಪೂರ್ಣ ಬೋಗಸ್ ಆಗಿದೆ. ಬಿಟ್ಟಿ ಉಡುಗೊರೆಗಳ ಮೂಲಕ ದೇಶವನ್ನು ದಿವಾಳಿ ಮಾಡಲು ಹೊರಟಿದ್ದಾರೆ. ಆದರೆ, ಬಿಜೆಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯ ದಿನ ಸಂಕಲ್ಪ ಪತ್ರ ಬಿಡುಗಡೆ ಮಾಡಿದೆ. ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವ ಭರವಸೆಗಳನ್ನು ಕೊಟ್ಟಿದೆ. ಇದು ಬಿಜೆಪಿಗೂ ಕಾಂಗ್ರೆಸ್ಸಿಗೂ ಇರುವ ವ್ಯತ್ಯಾಸ ಎಂದು ಹೇಳಿದರು.
ಹತ್ತು ವರ್ಷಗಳ ಹಿಂದೆ ಬೀದರ್ ಜಿಲ್ಲೆಯ ಕುರಿತು ಮಾತಾಡಬೇಕಾದರೆ ಮೊದಲು ಹಿಂದುಳಿದ ಹಣೆಪಟ್ಟಿ ಎಂಬ ಹೆಸರು ಬಳಸಲಾಗುತ್ತಿತ್ತು. ಆದರೆ, ಮೋದಿಯವರ ಅಧಿಕಾರದ ಅವಧಿಯಲ್ಲಿ ನಾನು ಮಾಡಿದ ಕೆಲಸಗಳಿಂದ ಈಗ ಆ ಹಣೆಪಟ್ಟಿ ದೂರವಾಗಿದೆ. ಯಾರೂ ಆ ಪದ ಬಳಸುತ್ತಿಲ್ಲ. ಹೆದ್ದಾರಿಗಳು ಅಭಿವೃದ್ಧಿ ಕಂಡಿವೆ. ಕೇಂದ್ರದ ಅನೇಕ ಯೋಜನೆಗಳ ಲಾಭ ಜಿಲ್ಲೆಯ ಜನರಿಗೆ ಸಿಕ್ಕಿದೆ ಎಂದು ತಿಳಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ ಮಾತನಾಡಿ,‘ಏ.18ರಂದು ಬಿಜೆಪಿ ಶಕ್ತಿ ಪ್ರದರ್ಶನದ ಮೂಲಕ ಭಗವಂತ ಖೂಬಾ ಅವರು ನಾಮಪತ್ರ ಸಲ್ಲಿಸುವರು. ಅಂದು ನಡೆಯುವ ಕಾರ್ಯಕ್ರಮದಲ್ಲಿ ಸುಮಾರು 25 ಸಾವಿರ ಜನ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡಣವೀಸ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಸೇರಿದಂತೆ ಹಲವು ಜನ ಮುಖಂಡರು ಭಾಗವಹಿಸುವರು. ಬೆಳಿಗ್ಗೆ 10ಕ್ಕೆ ನಗರದ ಗಣೇಶ ಮೈದಾನದಲ್ಲಿ ಬಹಿರಂಗ ಸಭೆ ನಡೆಯಲಿದೆ. ಮಧ್ಯಾಹ್ನ ರ್ಯಾಲಿಯಲ್ಲಿ ತೆರಳಿ ನಾಮಪತ್ರ ಸಲ್ಲಿಸಲಾಗುವುದು’ ಎಂದು ಹೇಳಿದರು.
ಶಾಸಕ ಡಾ.ಶೈಲೇಂದ್ರ ಕೆ. ಬೆಲ್ದಾಳೆ, ಮಾಜಿ ಶಾಸಕ ಪ್ರಕಾಶ ಖಂಡ್ರೆ, ಮುಖಂಡರಾದ ರಾಜಶೇಖರ ನಾಗಮೂರ್ತಿ, ಬಾಬು ವಾಲಿ, ಬಸವರಾಜ ಪವಾರ, ಶ್ರೀನಿವಾಸ ಚೌಧರಿ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.