ಹುಮನಾಬಾದ್: ‘ಕೊರೊನಾ ಸೋಂಕು ಹಳ್ಳಿ ಪ್ರದೇಶಗಳಲ್ಲಿ ಕಂಡುಬರು ತ್ತಿದ್ದು, ಅದರ ನಿಯಂತ್ರಣಕ್ಕೆ ಗ್ರಾಮದ ಜನರು ಸಹ ಶ್ರಮಿಸಬೇಕು’ ಎಂದು ಶಾಸಕ ರಾಜಶೇಖರ ಪಾಟೀಲ ತಿಳಿಸಿದರು.
ತಾಲ್ಲೂಕಿನ ಘಾಟಬೋರಾಳ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಿ ಅವರು ಮಾತನಾಡಿದರು.
‘ಗ್ರಾಮದ ಪ್ರತಿಯೊಬ್ಬರು ಕೋವಿಡ್ ಲಸಿಕೆ ಪಡೆಯಬೇಕು. ಇದರಿಂದ ಆರೋಗ್ಯದ ಮೇಲೆ ಯಾವುದೇ ಅಡ್ಡ ಪರಿಣಾಮ ಇಲ್ಲ. ಮನೆಯಿಂದ ಹೊರಬಂದಾಗ ಮಾಸ್ಕ್ ಧರಿಸಬೇಕು. ವ್ಯಕ್ತಿಗತ ಅಂತರ ಕಾಪಾಡಬೇಕು. ಸ್ಯಾನಿಟೈಸರ್ ಉಪಯೋಗಿಸಬೇಕು’ ಎಂದು ಸಲಹೆ ಮಾಡಿದರು.
‘ಅಧಿಕಾರಿಗಳು ಜನರಲ್ಲಿ ಕೋವಿಡ್ ಮತ್ತು ಅದರ ಮುನ್ನೆಚ್ಚರಿಕೆಯ ಬಗ್ಗೆ ಜಾಗೃತಿ ಮೂಡಿಸಬೇಕು. ಆಸ್ಪತ್ರೆಯಲ್ಲಿ ರೋಗಿಗಳಿಗೆ ಉತ್ತಮ ರೀತಿಯಿಂದ ಚಿಕಿತ್ಸೆ ನೀಡಬೇಕು’ ಎಂದು ತಿಳಿಸಿದರು.
ತಹಶೀಲ್ದಾರ್ ನಾಗಯ್ಯ ಹಿರೇಮಠ, ಡಿವೈಎಸ್ಪಿ ಸೋಮಲಿಂಗ ಕುಂಬಾರ, ಹಳ್ಳಿಖೇಡ್ ಬಿ. ಪುರಸಭೆ ಅಧ್ಯಕ್ಷ ಮಾಹಾಂತಯ್ಯ ತೀರ್ಥ, ತಾಲ್ಲೂಕು ನೋಡಲ್ ಅಧಿಕಾರಿ ಡಾ. ಗೋವಿಂದ್, ಬ್ಲಾಕ್ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಅಫ್ಸರ್ಮಿಯ್ಯಾ, ರೋಷನ್ ಸಿಂಧೆ, ರಂಜೀತ್ ಮಾನೆಕರ್, ಜ್ಞಾನೇಶ್ವರ ಭೋಸ್ಲೆ ಇದ್ದರು.