ಬೀದರ್: ‘ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಹಾಗೂ ಆತ್ಮನಿರ್ಭರ ಯೋಜನೆಗಳ ಲಾಭವನ್ನು ಜಿಲ್ಲೆಯ ಜನ ಪಡೆದುಕೊಳ್ಳಬೇಕು’ ಎಂದು ಸಂಸದ ಭಗವಂತ ಖೂಬಾ ಮನವಿ ಮಾಡಿದರು.
‘ಯಾವ ಯಾವ ವೃತ್ತಿಗೆ ಹಣಕಾಸಿನ ನೆರವು ಕೊಡಲು ಸಾಧ್ಯವಿದೆ ಎನ್ನುವ ಕುರಿತು ಪಟ್ಟಿ ತಯಾರಿಸಿ ವರದಿ ಕೊಡುವಂತೆ ಈಗಾಗಲೇ ಜಿಲ್ಲಾ ಕೈಗಾರಿಕೆ ಕೇಂದ್ರದ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ’ ಎಂದು ನಗರದಲ್ಲಿ ಶುಕ್ರವಾರ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.
ಕೊರೊನಾ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಎಲ್ಲ ರೀತಿಯ ನೆರವು ನೀಡುತ್ತಿದೆ. ದೇಶಿಯವಾಗಿ ವೆಂಟಿಲೇಟರ್ ಉತ್ಪಾದನೆ ಮಾಡಲಾಗುತ್ತಿದೆ. ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ವಿರೋಧ ಪಕ್ಷದಲ್ಲಿ ಇದ್ದೇವೆ ಎನ್ನುವ ಕಾರಣಕ್ಕೇ ರಾಜ್ಯ ಸರ್ಕಾರ ಮಾಡಿರುವ ವೆಂಟಿಲೇಟರ್ಗಳ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
‘ಜಿಲ್ಲೆಯಲ್ಲಿ ಪ್ರಧಾನಮಂತ್ರಿ ಜನಧನ ಯೋಜನೆಯಡಿ 3,55,786 ಫಲಾನುಭವಿಗಳು, ಪ್ರಧಾನಮಂತ್ರಿ ಉಜ್ವಲ್ ಯೋಜನೆಯಡಿ 2,00,250, ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ 2,35,254 ಫಲಾನುಭವಿಗಳು ವೃದ್ಧಾಪ್ಯ ಹಾಗೂ ವಿಧವಾ ವೇತನದ ಲಾಭ ಪಡೆದುಕೊಂಡಿದ್ದಾರೆ’ ಎಂದು ತಿಳಿಸಿದರು.
‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 2,75,5298 ಜನ ಜಾಬ್ ಕಾರ್ಡ್ ಪಡೆದಿದ್ದಾರೆ. ಆಯುಷ್ಮಾನ್ ಭಾರತ ಯೋಜನೆಯಡಿ 15,534 ಜನ ಚಿಕಿತ್ಸೆ ಪಡೆದಿದ್ದಾರೆ’ ಎಂದು ಹೇಳಿದರು.
‘ಪ್ರಧಾನಮಂತ್ರಿ ಕೃಷಿ ಸಮ್ಮಾನ ಯೋಜನೆಯಡಿ 2,15,974, ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ 4,93,267 ಜನ ಪಡಿತರ ಪಡೆದಿದ್ದಾರೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 5,86,631 ವ್ಯಕ್ತಿಗಳು ನೋಂದಣಿ ಮಾಡಿಕೊಂಡಿದ್ದಾರೆ’ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ರಘುನಾಥರಾವ್ ಮಲ್ಕಾಪುರೆ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಮಂಠಾಳಕರ್, ಕಲಬುರ್ಗಿ ವಿಭಾಗದ ಪ್ರಮುಖ ಈಶ್ವರಸಿಂಗ್ ಠಾಕೂರ್, ಉಪೇಂದ್ರ ದೇಶಪಾಂಡೆ, ಮಲ್ಲಿಕಾರ್ಜುನ ಇದ್ದರು.