ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೋಧನೆಗೆ ಸರಳ ವಿಧಾನ ಬಳಸಿ

ಪ್ರಾಥಮಿಕ ಶಾಲಾ ಶಿಕ್ಷಕರ ತರಬೇತಿ ಸಮಾರೋಪ: ಬಾರಾಟಕೆ ಕಿವಿಮಾತು
Last Updated 26 ನವೆಂಬರ್ 2022, 14:21 IST
ಅಕ್ಷರ ಗಾತ್ರ

ಬೀದರ್: ‘ಮಕ್ಕಳಿಗೆ ವಿಷಯ ಅರ್ಥವಾಗುವ ರೀತಿಯಲ್ಲಿ ಶಿಕ್ಷಕರು ಸರಳ ಬೋಧನಾ ವಿಧಾನ ಅನುಸರಿಸಬೇಕು’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಗಣಪತಿ ಬಾರಾಟಕೆ ಹೇಳಿದರು.

ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಲ್ಲಿಯ ನೌಬಾದ್‍ನ ಡಯಟ್‍ನಲ್ಲಿ ಹಮ್ಮಿಕೊಂಡಿದ್ದ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಹಾಗೂ 21ನೇ ಶತಮಾನದ ಬೋಧನಾ ಕೌಶಲ ಕುರಿತ 12 ದಿನಗಳ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಶಿಕ್ಷಕರು ಮಕ್ಕಳ ಕಲಿಕಾ ಸಾಮರ್ಥ್ಯವನ್ನು ಗ್ರಹಿಸಬೇಕು. ಅದಕ್ಕೆ ಅನುಗುಣವಾಗಿ ಆಸಕ್ತಿಯಿಂದ ಪಾಠ ಬೋಧನೆ ಮಾಡಬೇಕು. ಮಕ್ಕಳ ಭವಿಷ್ಯ ಉಜ್ವಲಗೊಳಿಸಲು ಶ್ರಮಿಸಬೇಕು ಎಂದು ಸಲಹೆ ನೀಡಿದರು.

ತರಬೇತಿಗಳು ಹೊಸ ವಿಷಯ ಅರಿತುಕೊಳ್ಳಲು ಸಹಕಾರಿಯಾಗುತ್ತವೆ. ಪರಿಣಾಮಕಾರಿ ಬೋಧನೆಗೆ ನೆರವಾಗುತ್ತವೆ ಎಂದು ತಿಳಿಸಿದರು.

ಮಕ್ಕಳ ಸಮಗ್ರ ಬೆಳವಣಿಗೆಯ ಹಿತದೃಷ್ಟಿಯಿಂದ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ರೂಪಿಸಲಾಗಿದೆ ಎಂದು ಹೇಳಿದರು.

ಶಿಕ್ಷಕರು ತರಬೇತಿಯಲ್ಲಿ ಪಡೆದ ಜ್ಞಾನವನ್ನು ವಿದ್ಯಾರ್ಥಿಗಳಿಗೆ ಧಾರೆ ಎರೆಯಬೇಕು. ಜಿಲ್ಲೆಯ ಶೈಕ್ಷಣಿಕ ಪ್ರಗತಿಗೆ ಕೈಜೋಡಿಸಬೇಕು ಎಂದು ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ನಿರ್ದೇಶಕ ರೇವಣಸಿದ್ದಪ್ಪ ಜಲಾದೆ ಹೇಳಿದರು.

ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಹಾಗೂ ನವೀನ ಬೋಧನಾ ಕೌಶಲ ಕುರಿತು ಮೊದಲ ಹಂತದಲ್ಲಿ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ನಾಲ್ಕು ತಂಡಗಳಲ್ಲಿ ತರಬೇತಿ ನೀಡಲಾಗಿದೆ. ಎರಡನೇ ಹಂತದಲ್ಲಿ ಪ್ರೌಢಶಾಲಾ ಶಿಕ್ಷಕರಿಗೆ ಎರಡು ತಂಡಗಳಲ್ಲಿ ತರಬೇತಿ ಕೊಡಲಾಗುವುದು ಎಂದು ತಿಳಿಸಿದರು.

ಶಿಬಿರಾರ್ಥಿಗಳಾದ ಅಕ್ಕಮಹಾದೇವಿ, ವಿಜಯಲಕ್ಷ್ಮಿ, ರಾಜಕುಮಾರ, ಬಸವರಾಜ ಸಿಂದೋಲ್ ಅನುಭವ ಹಂಚಿಕೊಂಡರು. ಬೆಂಗಳೂರಿನ ಆ್ಯಕ್ಟ್ ಸಂಸ್ಥೆಯ ಸಂಪನ್ಮೂಲ ವ್ಯಕ್ತಿಗಳಾದ ಕೃಷ್ಣ ಹಾಗೂ ಜಾಫರ್ ತರಬೇತಿ ನಡೆಸಿಕೊಟ್ಟರು.

ಡಯಟ್ ನೋಡಲ್ ಅಧಿಕಾರಿ ಸಂತೋಷ ಪೂಜಾರಿ, ಉಪ ಪ್ರಾಚಾರ್ಯ ಮಹಮ್ಮದ್ ಗುಲ್ಶನ್, ಉಪನ್ಯಾಸಕರು ಇದ್ದರು. ವಿಜಯಲಕ್ಷ್ಮಿ ಸ್ವಾಗತಿಸಿದರು. ಗಣಪತಿ ಹಡಪದ ನಿರೂಪಿಸಿದರು.

ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘ, ಅಕಾಡೆಮಿ ಫಾರ್ ಕ್ರಿಯೇಟಿವ್ ಟೀಚಿಂಗ್ ಟ್ರಸ್ಟ್, ಡಯಟ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಶಿಬಿರ ಆಯೋಜಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT