ಬೀದರ್: ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಹನ್ನೊಂದನೇ ಘಟಿಕೋತ್ಸವ ಜನವರಿ 17ರಂದು ವಿ.ವಿ.ಯ ಕೇಂದ್ರ ಸ್ಥಾನದಲ್ಲಿ ನಡೆಯಲಿದ್ದು, ‘ಬೆಂಗಳೂರಿನ ಪಶು ವೈದ್ಯಕೀಯ ಮಹಾವಿದ್ಯಾಲಯದ ವಿಶ್ವಾಸ್ ಕೆ.ಎಂ. ಹಾಗೂ ಹಾಸನದ ಶ್ರುತಿ ವಲ್ಸನ್ ತಲಾ 10 ಚಿನ್ನದ ಪದಕಗಳಿಗೆ ಭಾಜನರಾಗಲಿದ್ದಾರೆ’ ಎಂದು ವಿಶ್ವವಿದ್ಯಾಲಯದ ಕುಲಪತಿ ಡಾ.ಎಚ್.ಡಿ.ನಾರಾಯಣ ಸ್ವಾಮಿ ಗುರುವಾರ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.
‘662 ಸ್ನಾತಕ, 122 ಸ್ನಾತಕೋತ್ತರ ಪದವೀಧರರು ಹಾಗೂ ಡಾಕ್ಟರೇಟ್ ಪಡೆದ 37 ಮಂದಿಗೆ ಪ್ರಮಾಣ ಪತ್ರ ಪ್ರದಾನ ಮಾಡಲಾಗುವುದು. ಘಟಿಕೋತ್ಸವದ ದಿನ 312 ಪದವೀಧರರು ಪದವಿ ಸ್ವೀಕರಿಸಲಿದ್ದಾರೆ. ಒಟ್ಟು 113 ವಿದ್ಯಾರ್ಥಿಗಳು ಚಿನ್ನದ ಪದಕಗಳನ್ನು ಪಡೆಯಲಿದ್ದಾರೆ’ ಎಂದು ತಿಳಿಸಿದರು.
‘ಬೀದರ್ನ ಪಶು ವೈದ್ಯಕೀಯ ಮಹಾವಿದ್ಯಾಲಯದ ಸಚಿನ್ ಕೊಂಡಗುರಲಿ 6, ಶಿವಾನಿ ಮಾಮಾನೆ 5, ಹಾಸನದ ಪಶು ವೈದ್ಯಕೀಯ ಮಹಾವಿದ್ಯಾಲಯದ ವರುಣ ಶಾಸ್ತ್ರಿ ಹಾಗೂ ಶ್ರಾವ್ಯಾ ಬಿ.ಎಲ್. ತಲಾ 4 ಚಿನ್ನದ ಪದಕಗಳನ್ನು ಪಡೆಯಲಿದ್ದಾರೆ’ ಎಂದು ಹೇಳಿದರು.
‘ಅನಾರೋಗ್ಯದ ಕಾರಣ ಘಟಿಕೋತ್ಸವದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲವೆಂದು ರಾಜ್ಯಪಾಲರು ಸಂದೇಶ ಕಳಿಸಿದ್ದಾರೆ.
ಕೇಂದ್ರ ಕೃಷಿ ಮತ್ತು ರೈತ ಕ್ಷೇಮಾಭಿವೃದ್ಧಿ ಸಚಿವಾಲಯದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶೋಕ ದಳವಾಯಿ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ವಿಶ್ವವಿದ್ಯಾಲಯದ ಸಹ ಕುಲಾಧಿಪತಿ ಪಶುಸಂಗೋಪನೆ ಸಚಿವ ಪ್ರಭು ಚವಾಣ್ ಅಧ್ಯಕ್ಷತೆ ವಹಿಸಲಿದ್ದಾರೆ’ ಎಂದು ತಿಳಿಸಿದರು.
ಪಶು ವೈದ್ಯಕೀಯ ವಿಜ್ಞಾನಗಳ ವಿಶ್ವವಿದ್ಯಾಲಯದ 11ನೇ ಘಟಿಕೋತ್ಸವದಲ್ಲಿ 312 ಪದವೀಧರರು ಪದವಿ ಸ್ವೀಕರಿಸಲಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.