ಚಿಟಗುಪ್ಪ: ‘ಪಟ್ಟಣದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಅದರ ನಿಯಂತ್ರಣಕ್ಕೆ ನಾಗರಿಕರ ಸಹಕಾರ ಮುಖ್ಯ’ ಎಂದು ವೈದ್ಯಾಧಿಕಾರಿ ಡಾ.ವೀರನಾಥ ಕನಕ್ ತಿಳಿಸಿದ್ದಾರೆ.
ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಒಳಪಟ್ಟ ನಾಗರಿಕರ ಗಂಟಲು ದ್ರವ ಮಾದರಿ ಸಂಗ್ರಹಿಸಿ ಅವರು ಮಾತನಾಡಿದರು.
‘ಎಲ್ಲರೂ ಅಂತರ ಕಾಯ್ದುಕೊಳ್ಳಬೇಕು. ಮಾಸ್ಕ್ ಧರಿಸಬೇಕು. ವಿವಿಧ ಬಡಾವಣೆಯಲ್ಲಿ ರ್ಯಾಂಡಮ್ ಪರೀಕ್ಷೆ ನಡೆಸುತ್ತಿರುವ ಆರೋಗ್ಯ, ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೆ ಸಹಕಾರ ನೀಡಬೇಕು. ಜೀವ ರಕ್ಷಣೆಗೆ ಪರೀಕ್ಷೆ ಅನಿವಾರ್ಯ’ ಎಂದರು.
‘ಮುಂದಿನ 15 ದಿನಗಳಲ್ಲಿ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಯ ಬೆಡ್ ಸಿದ್ಧವಾಗುತ್ತವೆ. ಸೋಂಕಿತರ ವರದಿ ಮತ್ತಷ್ಟು ಬೇಗ ಬರುವ ಸಾಧ್ಯತೆ ಇದೆ’ ಎಂದು ನುಡಿದರು.
ಪುರಸಭೆ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.