ಬೀದರ್: ಇಲ್ಲಿಯ ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜಿನಲ್ಲಿ ಯುಕ್ತಿ 2023 ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿದ ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಶೈಲೇಂದ್ರ ಬೆಲ್ದಾಳೆ ಮಾತನಾಡಿ, ವಿದ್ಯಾರ್ಥಿಗಳು ಶ್ರಮಪಟ್ಟು ವ್ಯಾಸಂಗ ಮಾಡಬೇಕು. ಪದವಿ ಪಡೆದ ನಂತರ ಸ್ವಂತ ಉದ್ಯೋಗ ಆರಂಭಿಸಿ, ಇತರರಿಗೂ ಆಸರೆಯಾಗಬೇಕು ಎಂದು ಹೇಳಿದರು.
ಶಾಸಕ ರಹೀಂಖಾನ್ ಮಾತನಾಡಿ, ವಿದ್ಯಾರ್ಥಿ ಜೀವನ ಬಹಳ ಅಮೂಲ್ಯವಾಗಿದೆ. ವಿದ್ಯಾರ್ಥಿಗಳು ಇದನ್ನು ಸರಿಯಾಗಿ ಬಳಸಿಕೊಳ್ಳಬೇಕು. ದೇಶದ ಉತ್ತಮ ಪ್ರಜೆಯಾಗಲು ಪ್ರಯತ್ನಿಸಬೇಕು ಎಂದರು.
ಕಾಲೇಜು ನಿರ್ದೇಶಕ ಶರಣಬಸಪ್ಪ ದೇಶಮುಖ ಮಾತನಾಡಿ, ಶರಣಬಸವಪ್ಪ ಅಪ್ಪ ಅವರು ಜಿಲ್ಲೆಯ ವಿದ್ಯಾರ್ಥಿಗಳ ಅನುಕೂಲಕ್ಕೆ ಕಾಲೇಜು ಆರಂಭಿಸಿದ್ದಾರೆ. ಬರುವ ದಿನಗಳಲ್ಲಿ ನ್ಯಾನೋ ಟೆಕ್ನಾಲಜಿಯಂತಹ ಕೋರ್ಸ್ನ ಅವಶ್ಯಕತೆ ಇದೆ ಹೇಳಿದರು.
ಕಲಬುರಗಿಯ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಮಾತನಾಡಿ, ಶರಣಬಸವಪ್ಪ ಅಪ್ಪ ಹಾಗೂ ಮಾತೆ ದಾಕ್ಷಯಣಿ ಅವರ ಅಪೇಕ್ಷೆಯಂತೆ ಬೀದರ್ನ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಕೊಡುತ್ತಿರುವುದು ಸಂತಸದ ಸಂಗತಿ. ಕಾಲೇಜಿನಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ವಿವಿಧ ಕೈಗಾರಿಕೆಗಳನ್ನು ಶುರು ಮಾಡಿ, ಸಮಾಜಕ್ಕೆ ಸಹಕಾರಿಯಾಗಿದ್ದಾರೆ ಎಂದರು.
ಪ್ರಾಚಾರ್ಯೆ ವಿನಿತಾ ಪಾಟೀಲ ಮಾತನಾಡಿದರು. ಕಾಲೇಜಿನ ಮ್ಯಾಗಝಿನ್ ಬಿಡುಗಡೆ ಮಾಡಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ವಿದ್ಯಾರ್ಥಿಗಳಿಂದ ನಡೆದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು.
ಶರಣಬಸವೇಶ್ವರ ವಿಜ್ಞಾನ, ವಾಣಿಜ್ಯ ಹಾಗೂ ಕಲಾ ಕಾಲೇಜಿನ ಪ್ರಾಚಾರ್ಯ ಡಾ. ಸತೀಶ ಪ್ರತಾಪುರೆ, ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಇದ್ದರು.