ಬೀದರ್: ‘ಚುನಾವಣೆ ಆಯೋಗದ ನಿರ್ದೇಶನದಂತೆ ತೆಗೆದುಕೊಳ್ಳಬೇಕಾದ ಎಲ್ಲ ಕ್ರಮಗಳನ್ನು ಜಿಲ್ಲಾಡಳಿತ ವತಿಯಿಂದ ಕೈಗೊಳ್ಳಲಾಗಿದೆ’ ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ.ಎಚ್.ಆರ್. ಮಹಾದೇವ ತಿಳಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿಯ ವಿಡಿಯೊ ಕಾನ್ಫರೆನ್ಸ್ ಸಭಾಂಗಣದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸರ್ಕಾರದ ಪ್ರಚಾರ ಫಲಕಗಳನ್ನು ತೆಗೆಯಲು ಎಲ್ಲ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಈಗಾಗಲೇ ಎಲ್ಲ ಫಲಕಗಳನ್ನು ತೆರವುಗೊಳಿಸಲಾಗಿದೆ. ಬ್ಯಾಂಕಿನ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಬ್ಯಾಂಕಿನಿಂದ ಈ ಹಿಂದೆ ಆಗಿರುವ ಹಣಕಾಸಿನ ವ್ಯವಹಾರದ ಮಾಹಿತಿ ಪಡೆದುಕೊಳ್ಳಲಾಗಿದೆ. ಮತ್ತೆ ಈಗ ಪ್ರತಿನಿತ್ಯದ ಹಣಕಾಸಿನ ವ್ಯವಹಾರದ ಮೇಲೆ ನಿಗಾ ಇಡಲಾಗಿದೆ’ ಎಂದು ತಿಳಿಸಿದರು.