ಶಿವಮೊಗ್ಗ: ಪಾಲಿಕೆ ಸದಸ್ಯ ಎಸ್.ಎನ್. ಚನ್ನಬಸಪ್ಪ ಅವರ ವಿರುದ್ಧ ಸುಳ್ಳು ದೂರು ದಾಖಲಿಸಿರುವ ಆಯುಕ್ತೆ ಚಾರುಲತಾ ಸೋಮಲ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಜಿಲ್ಲಾ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಶನಿವಾರ ಕಪ್ಪುಪಟ್ಟಿ ಧರಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಪಾಲಿಕೆ ಅಧಿಕಾರಿಗಳು ದಸರಾ ಹಬ್ಬವನ್ನು ವೈಭವಯುತವಾಗಿ ಪರಂಪರೆಗೆ ಅನುಗುಣವಾಗಿ ಮಾಡಬಹುದಿತ್ತು. ಉಪ ಚುನಾವಣೆ ನೀತಿ ಸಂಹಿತೆ ನೆಪದಲ್ಲಿ ಜನರ ಭಾವನೆಗೆ ನೋವು ತಂದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದಸರಾ ಉತ್ಸವ ವೈಭವಯುತವಾಗಿ ಆಚರಿಸುವಂತೆ ಸೋಮಲ್ ಅವರಿಗೆ ಮೊಬೈಲ್ ಮೂಲಕ ಹೇಳಿದ್ದಕ್ಕೆ ಅವರ ಮೇಲೆ ದೂರು ದಾಖಲಿಸಲಾಗಿದೆ. ಇದು ಚುನಾಯಿತ ಪ್ರತಿನಿಧಿಗಳಿಗೆ ಮಾಡಿದ ಅಪಮಾನ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿ ವರ್ಷ ಪಾಲಿಕೆ ವತಿಯಿಂದ ಶಿವಪ್ಪ ನಾಯಕ ಅರಮನೆಯಲ್ಲಿ ಸಾಂಸ್ಕೃತಿಕ ದಸರಾ ಕಾರ್ಯಕ್ರಮ ನಡೆಸಲಾಗುತ್ತಿತ್ತು. ಈ ಬಾರಿ ಸ್ಥಗಿತಗೊಳಿಸಲಾಗಿದೆ.
ವಿಜಯದಶಮಿ ದಿನ ನಗರದ ದೇವಾನುದೇವತೆಗಳ ಅಲಂಕಾರಕ್ಕೆ, ಪೂಜಾ ವಿಧಿವಿಧಾನಗಳಿಗೆ ಅನುದಾನ ನೀಡುವುದಿಲ್ಲ ಎಂದು ಹೇಳಿರುವುದು ಹಿಂದುಗಳ ಭಾವನೆಗೆ ನೋವು ತಂದಿದೆ. ಧಾರ್ಮಿಕ ಹಕ್ಕಿಗೆ ಚ್ಯುತಿ ತಂದಿದೆ ಎಂದರು.
ಶಾಸಕ ಕೆ.ಎಸ್. ಈಶ್ವರಪ್ಪ, ವಿಧಾನ ಪರಿಷತ್ ಸದಸ್ಯ ಎಸ್. ರುದ್ರೇಗೌಡ, ಪಾಲಿಕೆ ಸದಸ್ಯರಾದ ಎಸ್.ಎನ್. ಚನ್ನಬಸಪ್ಪ, ಎಸ್. ಜ್ಞಾನೇಶ್ವರ್, ಸುವರ್ಣಾ ಶಂಕರ್, ಸುರೇಖಾ ಮುರಳೀಧರ್, ಮುಖಂಡರಾದ ಎಸ್. ದತ್ತಾತ್ರಿ, ನಾಗರಾಜ್, ಡಿ. ಸೋಮಸುಂದರ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.