ಶಿವಮೊಗ್ಗ:ರಾಜ್ಯದಲ್ಲಿ ನಡೆಯುವ ಮೊದಲನೆ ಹಂತದ ಚುನಾವಣೆಯಲ್ಲಿ ಬಿರುಸಿನ ಪ್ರಚಾರ ಕೈಗೊಂಡಿದ್ದೇವೆ. ಅಲ್ಲಿನ 14 ಕ್ಷೇತ್ರಗಳಲ್ಲಿ 12ರಲ್ಲಿ ಗೆಲುವು ಖಚಿತ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ನಗರದಲ್ಲಿ ಸೋಮವಾರ ಅವರು ಸುದ್ದಿಗಾರರ ಜತೆ ಮಾತನಾಡಿದರು.
ಮೊದಲ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಮುಗಿಸಿದ್ದೇವೆ. ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ಗೆಲ್ಲುವುದು ನಿಶ್ಚಿತ. ಶಿವಮೊಗ್ಗದಲ್ಲೂ ಪುತ್ರ ಬಿ.ವೈ.ರಾಘವೇಂದ್ರ ಒಂದು ಲಕ್ಷ ಮತಗಳ ಅಂತರದಿಂದ ವಿಜಯ ಸಾಧಿಸುತ್ತಾರೆ ಎಂದು ಭವಿಷ್ಯ ನುಡಿದರು.
ಮಂಗಳವಾರದಿಂದ ಉಳಿದ 14 ಕ್ಷೇತ್ರಗಳಲ್ಲಿ ಪ್ರಚಾರ ಕೈಗೊಳ್ಳಲಾಗುವುದು. ಶಿವಮೊಗ್ಗ ಕ್ಷೇತ್ರದಲ್ಲೂ ಪ್ರವಾಸ ಮಾಢಲಾಗುವುದು. ಒಟ್ಟು22 ಸ್ಥಾನಗಳಲ್ಲಿ ಗೆಲುವು ಖಚಿತ ಎಂದರು.
ಐಟಿ ದಾಳಿ ರಾಜಕೀಯ ಪ್ರೇರಿತ ಅಲ್ಲ. ಅನುಮಾನ ಖಚಿತವಾದ ಕಡೆ ಅಧಿಕಾರಿಗಳು ದಾಳಿ ಮಾಡುತ್ತಿದ್ದಾರೆ ಎಂದು ಸಮರ್ಥಿಸಿಕೊಂಡರು.