ರಾಮನಗರ: ರಾಜ್ಯ ಸರ್ಕಾರ ಮಂಡಿಸಿದ ಬಜೆಟ್ ಎಲ್ಲಾ ವರ್ಗದ ಜನರನ್ನು ಗಮನದಲ್ಲಿರಿಸಿಕೊಂಡು ರೂಪಿಸಲಾಗಿದೆ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿದರು.
ಇಲ್ಲಿನ ಗೌಡಯ್ಯನದೊಡ್ಡಿಯಲ್ಲಿ ಅರ್ಕಾವತಿ ನದಿಗೆ ಅಡ್ಡಲಾಗಿ ₹2 ಕೋಟಿ ವೆಚ್ಚದ ಚೆಕ್ಡಾಂ ನಿರ್ಮಾಣ ಕಾಮಗಾರಿಗೆ ಭಾನುವಾರ ಚಾಲನೆ ನೀಡಿ ಅವರು ಮಾತನಾಡಿದರು.
ಬಜೆಟ್ನಲ್ಲಿ ಎಲ್ಲರಿಗೂ ಮುಖ್ಯಮಂತ್ರಿ ಕುಮಾರಸ್ವಾಮಿ ನ್ಯಾಯ ಒದಗಿಸಿದ್ದಾರೆ. ಬಜೆಟ್ಗೆ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. ಅದು ಅವರ ಕೆಲಸ ಎಂದು ಟೀಕಿಸಿದರು.
ಬಜೆಟ್ನಲ್ಲಿ ಸಮಗ್ರ ಕರ್ನಾಟಕಕ್ಕೆ ನ್ಯಾಯ ಒದಗಿಸಲಾಗಿದೆ. ಹಾರೋಹಳ್ಳಿ ದೊಡ್ಡ ಕ್ಷೇತ್ರವಾದ್ದರಿಂದ ತಾಲ್ಲೂಕು ಕೇಂದ್ರವನ್ನಾಗಿ ಘೋಷಣೆ ಮಾಡಲಾಗಿದೆ. ಬಾಲಗಂಗಾಧರನಾಥ ಸ್ವಾಮೀಜಿ, ಶಿವಕುಮಾರಸ್ವಾಮೀಜಿ ಅವರ ಹುಟ್ಟೂರನ್ನು ಅಭಿವೃದ್ಧಿಗೊಳಿಸಲು ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.
ಮೈತ್ರಿ ಸರ್ಕಾರ ಪತನವಾಗುತ್ತದೆ ಎಂದು ಮಾಧ್ಯಮಗಳು ದಿನಾಂಕ ನಿಗದಿ ಮಾಡುತ್ತಿವೆ. ಸೋಮವಾರ, ಬುಧವಾರ, ಶುಕ್ರವಾರ ಅಂತ ದಿನಗಣನೇ ಆರಂಭಿಸಿವೆ. ಆದರೆ, ಮೈತ್ರಿ ಸರ್ಕಾರ ಐದು ವರ್ಷ ಸುಭದ್ರವಾಗಿರಲಿದೆ ಎಂದು ತಿಳಿಸಿದರು.
ಎರಡು ವರ್ಷ ಬೇಕು: ಜಿಲ್ಲಾ ಕೇಂದ್ರ ರಾಮನಗರದಲ್ಲಿ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಸಾಕಾರವಾಗಲು ಇನ್ನು 2ವರ್ಷ ಕಾಲಾವಕಾಶ ಬೇಕಾಗಿದೆ. ನಗರವ್ಯಾಪ್ತಿಯಲ್ಲಿ ಶಾಶ್ವತ ಕುಡಿಯುವ ನೀರು ವ್ಯವಸ್ಥೆ ಕಲ್ಪಿಸಲು ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.
ನಗರದ ಕೆಲವು ಬಡಾವಣೆಗಳಲ್ಲಿ 5 ರಿಂದ 7ದಿನಗಳಿಗೆ ನೀರು ಪೂರೈಕೆಯಾಗುತ್ತಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಗರ ವ್ಯಾಪ್ತಿಯಲ್ಲಿ ನೀರು ಸರಬರಾಜಿಗೆ ಅಗತ್ಯ ಬಿದ್ದಲ್ಲಿ ಟ್ಯಾಂಕರ್ಗಳಲ್ಲಿ ನೀರು ಪೂರೈಸುವಂತೆ ನಗರಸಭೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಕೊಳವೆ ಬಾವಿಗಳಿಗೆ ಮೋಟಾರ್ ಅಳವಡಿಕೆ ಮುಂತಾದ ವ್ಯವಸ್ಥೆಗಾಗಿ ಸರ್ಕಾರದಿಂದ ₹1 ಕೋಟಿ ಅನುದಾನ ಬಿಡುಗಡೆ
ಮಾಡಿದೆ. ಕನಕಪುರ ರಸ್ತೆ ಮೇಲ್ದರ್ಜೆಗೇರಿಸುವ ಕಾಮಗಾರಿ ಟೆಂಡರ್ ಪ್ರಕ್ರಿಯೆಯಲ್ಲಿದೆ ಎಂದು ತಿಳಿಸಿದರು.
ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಅಶ್ವತ್ಥ್, ಜಿಲ್ಲಾ ಪಂಚಾಯಿತಿ ಸದಸ್ಯೆ ಪ್ರಭಾವತಿ ಕೆ. ಶಿವಲಿಂಗಯ್ಯ, ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ರಾಜಶೇಖರ್, ಕೈಲಾಂಚ ಗ್ರಾಮ ಪಂಚಾಯಿತಿ ಅಧ್ಯಕ್ಷ ಆರ್.ಪಾಂಡುರಂಗ, ಉಪಾಧ್ಯಕ್ಷ ಜಿ.ಪಿ. ಗಿರೀಶ್, ಎಪಿಎಂಸಿ ಅಧ್ಯಕ್ಷ ದೊರೆಸ್ವಾಮಿ, ಮುಖಂಡರಾದ ಎಚ್.ಸಿ. ರಾಜಣ್ಣ, ಜಿ.ಎನ್. ಸತ್ತೀಗೌಡ, ವಡ್ಡರಹಳ್ಳಿ ವೆಂಕಟೇಶ್, ಪುಟ್ಟೇಗೌಡ, ಶಿವರಾಮಯ್ಯ, ಜಿ.ವೆಂಕಟೇಗೌಡ, ಜಯಕುಮಾರ್, ವಕೀಲ ರಾಜಶೇಖರ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.