ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬೇಗೂರು ಠಾಣಾ ವ್ಯಾಪ್ತಿಯಲ್ಲಿ 11ರಂದು ನಡೆದಿದ್ದ ಕೇರಳದ ಚಿನ್ನದ ವ್ಯಾಪಾರಿಯ ದರೋಡೆ ಪ್ರಕರಣದ ಎಂಟು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಇವರು ಅಂತರರಾಜ್ಯ ದರೋಡೆಕೋರರು ಎಂಬುದು ತನಿಖೆಯಿಂದ ದೃಢಪಟ್ಟಿದ್ದು, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲೂ ಇದೇ ರೀತಿಯ ಕೃತ್ಯ ಎಸಗಿರುವುದು ತನಿಖೆಯಿಂದ ದೃಢಪಟ್ಟಿದೆ.
ಬಂಧಿತರಿಂದ ವ್ಯಾಪಾರಿಯ ಕಾರು ಹಾಗೂ ದುಷ್ಕೃತ್ಯ ಎಸಗಲು ಬಳಸಿದ್ದ ಎರಡು ಕಾರುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
‘ದರೋಡೆ ಮಾಡಿರುವ ₹40 ಲಕ್ಷ ಹಣ ಪತ್ತೆಯಾಗಿಲ್ಲ. ತನಿಖೆ ಪ್ರಗತಿಯಲ್ಲಿದೆ’ ಎಂದು ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.
ಬಂಧನ ಕಾರ್ಯಾಚರಣೆ ಬಗ್ಗೆ ಪೊಲೀಸರು ಹೆಚ್ಚು ಮಾಹಿತಿ ನೀಡಿಲ್ಲ. 10 ಮಂದಿ ದರೋಡೆ ಮಾಡಿದ್ದರು ಎಂದು ಹೇಳಲಾಗಿತ್ತು. ಸದ್ಯ ಎಂಟು ಮಂದಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ಸಿನಿಮೀಯ ಶೈಲಿಯಲ್ಲಿ ₹40 ಲಕ್ಷ ದರೋಡೆ ಮಾಡಿದ ದುಷ್ಕರ್ಮಿಗಳನ್ನು ಪತ್ತೆ ಹಚ್ಚಲು ವಿಶೇಷ ತನಿಖಾ ತಂಡ ರಚಿಸಲಾಗಿತ್ತು. ತಂಡವು ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಿ ಕಾರ್ಯಾಚರಣೆ ನಡೆಸಿದ್ದು, ಮೈಸೂರಿನಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗೊತ್ತಾಗಿದೆ.
ಘಟನೆ ನಡೆದ ದಿನವೇ ಐವರು ಆರೋಪಿಗಳನ್ನು ಸಾರ್ವಜನಿಕರ ನೆರವಿನಿಂದ ಪೊಲೀಸರು ಹಿಡಿದಿದ್ದರು.