ಚಾಮರಾಜನಗರ: ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 129ನೇ ಜನ್ಮ ದಿನವನ್ನು ಸರಳವಾಗಿ ಆಚರಿಸಲಾಯಿತು.
ಕೋವಿಡ್-19ರ ಕಾರಣಕ್ಕೆ ಸರಳವಾಗಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.
ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಡಾ.ಅಂಬೇಡ್ಕರ್ ಪ್ರತಿಮೆಗೆ ಶಾಸಕಸಿ.ಪುಟ್ಟರಂಗಶೆಟ್ಟಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಕೆ.ಎಸ್. ಮಹೇಶ್, ಜಿಲಾಧಿಕಾರಿ ಡಾ.ಎಂ.ಆರ್.ರವಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್ ನಾರಾಯಣರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದಕುಮಾರ್ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಮಾಲಾರ್ಪಣೆ ಮಾಡಿದರು.
ಬಳಿಕ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಗೌರವ ಸಲ್ಲಿಸಲಾಯಿತು.
ಸಿ. ಪುಟ್ಟರಂಗಶೆಟ್ಟಿ ಅವರು ಮಾತನಾಡಿ, ‘ಡಾ.ಬಿ.ಆರ್.ಅಂಬೇಡ್ಕರ್ ಅವರು ಸಮಾನತೆಗಾಗಿ ಹೋರಾಟ ನಡೆಸಿದ ಮಹಾನ್ ಶ್ರೇಷ್ಠರು. ಅವರಿಂದಲೇ ಇಂದು ಸಮಾನತೆ ಸಾಧಿಸುವ ಹಂತಕ್ಕೆ ತಲುಪಿದ್ದೇವೆ. ನಾವೆಲ್ಲರೂ ಒಂದೇ ಎಂಬುದನ್ನು ಅಂಬೇಡ್ಕರ್ ಅವರು ಸಾರಿದ್ದಾರೆ.ಅವರು ಮಹೋನ್ನತ ವಿಚಾರಗಳನ್ನು ಬಲ್ಲವರಾಗಿದ್ದರು. ಅವರ ಆದರ್ಶ ಹೋರಾಟ ನಮಗೆಲ್ಲರಿಗೂ ಮಾದರಿ’ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ. ಆನಂದಕುಮಾರ್ ಅವರು ಮಾತನಾಡಿ, ‘ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ಮೂಲಕವೇ ದೇಶದಲ್ಲಿ ಎಲ್ಲ ನೀತಿ ನಿಯಮಗಳು ಅನುಷ್ಠಾನವಾಗುತ್ತಿವೆ. ದೇಶ ಮುನ್ನಡೆ ಸಾಧಿಸಲು ಅಂಬೇಡ್ಕರ್ ಅವರ ಸಂವಿಧಾನವೇ ಮಾರ್ಗದರ್ಶಕ. ಪ್ರಸ್ತುತ ಪರಿಸ್ಥಿತಿಯಲ್ಲೂ ಸ್ಥಿರತೆ ಕಾಯ್ದುಕೊಳ್ಳಲು ಕಾರಣವೂ ಸಂವಿಧಾನವೇ’ ಎಂದರು.
‘ಆರ್ಥಿಕವಾಗಿ ಹಿಂದುಳಿದವರ ಏಳಿಗೆಗೂ ಶ್ರಮಿಸಿದ ಡಾ. ಬಿ.ಆರ್. ಅಂಬೇಡ್ಕರ್ ಅವರು ಮಹಿಳೆಯರ ಸಮಾನತೆ ಪ್ರತಿಪಾದಿಸಿದರು. ಸಮಾಜದ ಎಲ್ಲಾ ಸ್ತರಗಳಲ್ಲಿ ಮಹಿಳೆಯರು ಸಮಾನತೆ ಪಡೆದುಕೊಳ್ಳಲೂ ಅವರೇ ಕಾರಣರ’ ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್.ಆನಂದ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೆಶಕರಾದ ಹೊನ್ನೇಗೌಡ, ವಿವಿಧ ಸಂಘಟನೆಗಳ ಮುಖಂಡರಾದ ಸಿ.ಎಂ.ಕೃಷ್ಣಮೂರ್ತಿ, ಅರಕಲವಾಡಿ ನಾಗೇಂದ್ರ, ಸಿ.ಎಂ.ನರಸಿಂಹಮೂರ್ತಿ,ಬ್ಯಾಡಮೂಡ್ಲು ಬಸವಣ್ಣ, ಬಸವನಪುರ ರಾಜಶೇಖರ್ ಮತ್ತಿತರರು ಇದ್ದರು.