ಚಾಮರಾಜನಗರ: ತಾಲ್ಲೂಕಿನ ಚಂದಕವಾಡಿ ಹೋಬಳಿಯ ಚಾಟೀಪುರ ಗ್ರಾಮದಲ್ಲಿಅನ್ನಭಾಗ್ಯ ಯೋಜನೆಯ ಪಡಿತರ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಇಟ್ಟಿರುವುದನ್ನು ಪತ್ತೆಹಚ್ಚಿರುವ ಅಧಿಕಾರಿಗಳು ಹಾಗೂ ಪೊಲೀಸರು, 4.9 ಟನ್ ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ.
ಗ್ರಾಮದ ಸಲೀಂ ಎಂಬುವವರು ಮನೆಯ ಸಮೀಪ ಕೊಠಡಿಯೊಂದನ್ನು ನಿರ್ಮಿಸಿ, ಇತ್ತೀಚೆಗೆ ವಿತರಣೆ ಮಾಡಲಾಗಿದ್ದ ಪಡಿತರ ಅಕ್ಕಿಯನ್ನು ಜನರಿಂದ ಖರೀದಿಸಿ ಸಂಗ್ರಹಿಸಿಟ್ಟಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.
ಖಚಿತ ಮಾಹಿತಿ ಮೇರೆಗೆ ತಹಶೀಲ್ದಾರ್ ಜೆ.ಮಹೇಶ್, ಆಹಾರ ಶಿರಸ್ತೇದಾರರಾದ ಲಕ್ಷ್ಮಿ, ಡಿಸಿಐಬಿ ಇನ್ಸ್ಪೆಕ್ಟರ್ ಮಹದೇವಶೆಟ್ಟಿ ನೇತೃತ್ವದ ತಂಡ ಮಂಗಳವಾರ ಸಂಜೆ ಕಾರ್ಯಾಚರಣೆ ನಡೆಸಿ, 4,926 ಕೆಜಿ ಅಕ್ಕಿಯನ್ನು ಅಕ್ರಮ ದಾಸ್ತಾನು ಮಾಡಿರುವುದನ್ನು ಪತ್ತೆ ಹಚ್ಚಿದೆ.
ಆರೋಪಿ ಸಲೀಂ ಪರಾರಿಯಾಗಿದ್ದು, ಅವರ ವಿರುದ್ಧ ರಾಮಸಮುದ್ರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಮಿಳುನಾಡು ಅಥವಾ ಕೇರಳಕ್ಕೆ ಸಾಗಣೆ ಮಾಡುವ ಉದ್ದೇಶದಿಂದ ಅಕ್ಕಿಯನ್ನು ಸಂಗ್ರಹಿಸಲಾಗಿತ್ತು ಎಂದು ಹೇಳಲಾಗಿದೆ.