ಚಾಮರಾಜನರಗರ: 'ಜಿಲ್ಲಾ ಚುನಾವಣಾಧಿಕಾರಿ ಶಿಲ್ಪಾ ನಾಗ್ ಮತ್ತು ಹನೂರಿನ ಸಹಾಯಕ ಚುನಾವಣಾಧಿಕಾರಿ ಬಿ.ಮಲ್ಲಿಕಾರ್ಜುನ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರ ಪ್ರಭಾವಕ್ಕೆ ಒಳಗಾಗಿ ಕೆಲಸ ಮಾಡುತ್ತಿದ್ದು, ಇಬ್ಬರನ್ನೂ ಕರ್ತವ್ಯದಿಂದ ಬಿಡುಗಡೆಗೊಳಿಸಬೇಕು’ ಎಂದು ಡಾ.ಅಂಬೇಡ್ಕರ್ ಪೀಪಲ್ಸ್ ಪಾರ್ಟಿ ಅಭ್ಯರ್ಥಿ ಸಿ.ಎಂ.ಕೃಷ್ಣ ಅವರು ಶುಕ್ರವಾರ ಒತ್ತಾಯಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸುನಿಲ್ ಬೋಸ್ ಅವರು ನಾಮಪತ್ರಸಲ್ಲಿಸುವ ವೇಳೆ ನಮೂನೆ 26ರಲ್ಲಿ ಕುಟುಂಬದ ವಿವರಗಳನ್ನು ದಾಖಲು ಮಾಡಿಲ್ಲ. ಅವರಿಗೆ ಮದುವೆಯಾಗಿದ್ದು, ಮಕ್ಕಳೂ ಇದ್ದಾರೆ. ಹೀಗಿರುವಾಗ ಅವರು ಸುಳ್ಳು ಮಾಹಿತಿ ನೀಡಿದ್ದಾರೆ. ಆದರೆ, ಚುನಾವಣಾಧಿಕಾರಿಗಳು ಅವರ ನಾಮಪತ್ರವನ್ನು ಅಂಗೀಕರಿಸುವುದರ ಮೂಲಕ ಚುನಾವನಾ ಆಯೋಗದ ನಿಯಮಗಳನ್ನು ಉಲ್ಲಂಘಿಸಿದ್ದಾರೆ’ ಎಂದು ದೂರಿದರು.
‘ನಾನು ಈ ಸಂಬಂಧ ಚುನಾವಣಾ ಸಾಮಾನ್ಯ ವೀಕ್ಷಕರಿಗೆ ಎರಡು ದಿನಗಳ ಹಿಂದೆ ದೂರು ನೀಡಿದ್ದೆ. ಅವರು ಇಲ್ಲಿಯವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಇದರ ವಿರುದ್ಧ ಕಾನೂನು ಹೋರಾಟವನ್ನೂ ಮಾಡುತ್ತೇವೆ. ಜಿಲ್ಲಾಡಳಿತ ಭವನದ ಮುಂಭಾಗ ಪ್ರತಿಭಟನೆಯನ್ನೂ ನಡೆಸುತ್ತೇನೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಯಾವುದೇ ಕಾರಣಕ್ಕೂ ಗೆಲ್ಲುವುದಿಲ್ಲ. ಬೋಸ್ ಗೆದ್ದರೂ, ಕಾನೂನು ಹೋರಾಟದ ಬಳಿಕ ಅವರ ಸದಸ್ಯತ್ವ ಅನರ್ಹಗೊಳ್ಳಲಿದೆ’ ಎಂದು ಕೃಷ್ಣ ಹೇಳಿದರು.
‘ಹನೂರು ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾ ಅಧಿಕಾರಿಯಾಗಿರುವ ಬಿ.ಮಲ್ಲಿಕಾರ್ಜುನ ಅವರು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಹುದ್ದೆಯಿಂದ ಪದೋನ್ನತಿ ಹೊಂದಿ ಮಾರ್ಚ್ 16ರಂದು ವರ್ಗಾವಣೆಯಾಗಿದ್ದಾರೆ. ಹಾಗಿದ್ದರೂ, ಅವರನ್ನು ಜಿಲ್ಲೆಯಲ್ಲೇ ಉಳಿಸಿಕೊಂಡು ಚುನಾವಣಾ ಅಧಿಕಾರಿಯನ್ನಾಗಿ ಮಾಡಿದ್ದಾರೆ. ಅವರು ಮಹದೇವಪ್ಪ ಅವರಿಗೆ ಅತ್ಯಾಪ್ತರಾಗಿದ್ದು, ಅವರು ಹೇಳಿದಂತೆ ಕೆಲಸ ಮಾಡುತ್ತಿದ್ದಾರೆ’ ಎಂದು ದೂರಿದರು.
ಮುಖಂಡರಾದ ವೆಂಕಟೇಶ್, ನಟರಾಜ್, ಆನಂದ್ ಪಿ., ರಾಮು ಇದ್ದರು.
ಪ್ರತಿಭಟನೆ: ಇಬ್ಬರು ಅಧಿಕಾರಿಗಳನ್ನು ಕರ್ತವ್ಯದಿಂದ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಸಿ.ಎಂ.ಕೃಷ್ಣ ಅವರು ಶುಕ್ರವಾರ ಮಧ್ಯಾಹ್ನ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಯ ಮುಂಭಾಗ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.