ಚಾಮರಾಜನಗರ: ಅಮೃತ್ 2.0 ಕಾರ್ಯಕ್ರಮದಡಿ ನಗರದ ವಿವಿಧ ವಾರ್ಡ್ಗಳಿಗೆ ಕುಡಿಯುವ ನೀರು ಪೂರೈಸುವುದಕ್ಕಾಗಿ ₹1.20 ಕೋಟಿ ವೆಚ್ಚದಲ್ಲಿ ಜಲಸಂಗ್ರಹಾಗಾರ (ಟ್ಯಾಂಕ್) ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಗುರುವಾರ ಶಂಕು ಸ್ಥಾಪನೆ ನೆರವೇರಿಸಿದರು.
ರಾಮಸಮುದ್ರ ಬಡಾವಣೆಯಲ್ಲಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಹಾಗೂ ನಗರಸಭೆ ಸಹಯೋಗದಲ್ಲಿ ಕೇಂದ್ರ ಪುರಸ್ಕೃತ ಅಮೃತ್ 2.0 ಯೋಜನೆಯಲ್ಲಿ 15 ಲಕ್ಷ ಲೀಟರ್ ನೀರು ಸಂಗ್ರಹ ಸಾಮರ್ಥ್ಯದ ಟ್ಯಾಂಕ್ ನಿರ್ಮಿಸಲಾಗುತ್ತಿದೆ.
ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಸಿ.ಪುಟ್ಟರಂಗಶೆಟ್ಟಿ, ‘ನಗರದ ನಾಗರಿಕರಿಗೆ ಸಿ.ಪಿ.ಎಚ್.ಇ.ಇ.ಒ ಮಾನದಂಡಗಳಿಗೆ ಅನುಗುಣವಾಗಿ ಕುಡಿಯುವ ನೀರು ಸರಬರಾಜು ಮಾಡುವ ನಿಟ್ಟಿನಲ್ಲಿ ಹಾಲಿ ಇರುವ ನೀರು ಸರಬರಾಜು ವ್ಯವಸ್ಥೆಯನ್ನು ಸುಧಾರಿಸುವ ಯೋಜನೆಯನ್ನು ಕೇಂದ್ರ ಪುರಸ್ಕೃತ ಅಮೃತ್ 2.0 ಕಾರ್ಯಕ್ರಮದಡಿ ಕೈಗೆತ್ತಿಕೊಳ್ಳಲಾಗಿದೆ’ ಎಂದರು.
‘ರಾಮಸಮುದ್ರ ಬಡಾವಣೆಯಲ್ಲಿ ಈ ಹಿಂದೆ ಇದ್ದ ಜಲಸಂಗ್ರಹಾಗಾರ ಶಿಥಿಲಗೊಂಡು ಕುಸಿಯುವ ಸ್ಥಿತಿಯಲ್ಲಿತ್ತು. ಹಳೆ ಟ್ಯಾಂಕ್ ಕೆಡವಿ ಅದೇ ಜಾಗದಲ್ಲಿ ಹೊಸ ಟ್ಯಾಂಕ್ ನಿರ್ಮಿಸಲಾಗುತ್ತಿದೆ’ ಎಂದರು.
‘ಟ್ಯಾಂಕ್ ನಿರ್ಮಾಣ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು. ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಂಡು ಜನರಿಗೆ ಸಮರ್ಪಕವಾಗಿ ಕುಡಿಯುವ ನೀರು ಸರಬರಾಜು ಆಗುವಂತೆ ನೋಡಿಕೊಳ್ಳಬೇಕು’ ಎಂದು ಅವರು ನಗರಸಭೆಯ ಅಧಿಕಾರಿಗಳಿಗೆ ಸೂಚಿಸಿದರು.
ನಗರಸಭಾ ಸದಸ್ಯರಾದ ನಂಜುಂಡಸ್ವಾಮಿ, ಎಂ.ಆರ್.ರಾಜಪ್ಪ, ಮುಖಂಡ ನಾಗರಾಜು, ಆಯುಕ್ತರಾದ ಎಸ್.ವಿ.ರಾಮದಾಸ್ ಇದ್ದರು.
ಜಿಲ್ಲಾ ಕೇಂದ್ರದಲ್ಲಿ ಜನರಿಗೆ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಅಗತ್ಯ ಕ್ರಮ ವಹಿಸಲಾಗಿದೆ.