ಚಾಮರಾಜನಗರ: ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಕನ್ನಡ ಮತ್ತು ಸಂಸೃತಿ ಇಲಾಖೆ ಹಾಗೂ ಕನ್ನಡ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಸಹಯೋಗದಲ್ಲಿ ಗಡಿನಾಡು ಕನ್ನಡ ಉತ್ಸವ ಕಾರ್ಯಕ್ರಮ ಫೆ.10 ಸಂಜೆ 5 ಗಂಟೆಗೆ ಮಹದೇಶ್ವರ ಬೆಟ್ಟದ ಮಹದೇಶ್ವರ ಬಯಲು ರಂಗ ಮಂದಿರದಲ್ಲಿ ಆಯೋಜಿಸಲಾಗಿದೆ.
ಸಾಲೂರು ಮಠದ ಶಾಂತಮಲ್ಲಿಕಾರ್ಜುನ ಸ್ವಾಮಿ ಅವರು ದಿವ್ಯ ಸಾನಿಧ್ಯ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಕಾರ್ಯಕ್ರಮ ಉದ್ಘಾಟಿಸುವರು. ಹಿಂದುಳಿದ ವರ್ಗಗಳು ಹಾಗೂ ಕನ್ನಡ ಮತ್ತು ಸಂಸೃತಿ ಇಲಾಖೆ ಸಚಿವರಾದ ಶಿವರಾಜ್ ಎಸ್. ತಂಗಡಗಿ ಅವರು ಗಡಿನಾಡು ಕನ್ನಡ ಸಂಗೀತೋತ್ಸವಕ್ಕೆ ಚಾಲನೆ ನೀಡುವರು. ಶಾಸಕ ಎಂ.ಆರ್. ಮಂಜುನಾಥ್ ಅಧ್ಯಕ್ಷತೆ ವಹಿಸುವರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಉಪಸ್ಥಿತರಿರುವರು.
ಮಹದೇಶ್ವರಬೆಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಿ. ಅರ್ಚನಾ ಪ್ರಕಾಶ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
2023ರ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದ ಪ್ರೊ. ಗೋಪಾಲ್ ಜಗದೀಶ್ ಮತ್ತು ಸಾಹಿತ್ಯ ಕ್ಷೇತ್ರದ ಪ್ರೊ.ಸಿ.ನಾಗಣ್ಣ ಅವರನ್ನು ಸನ್ಮಾನಿಸಲಾಗುವುದು.
ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಡಿಸಿಎಫ್ ಜಿ.ಸಂತೋಷ್ ಕುಮಾರ್, ಇತರರು ಪಾಲ್ಗೊಳ್ಳುವರು.
ಬೆಳಿಗ್ಗೆ 6.30 ಗಂಟೆಗೆ ಕನ್ನಡ ಜಾಗೃತಿ ಜಾಥಾ, 9.30 ಗಂಟೆಗೆ ಇಂಡಿಗನತ್ತ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ದತ್ತು ಪಡೆಯುವುದು, ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಮಟ್ಟದ ಕವಿಗೋಷ್ಠಿ, ಮಧ್ಯಾಹ್ನ 12 ಗಂಟೆಗೆ ಜಾನಪದ ಸಾಹಿತ್ಯದ ಬಗ್ಗೆ ಕವಿಗೋಷ್ಠಿ, 1 ಗಂಟೆಗೆ ಯಳಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಿಂದ ಗಡಿನಾಡು ಬಗ್ಗೆ ಉಪನ್ಯಾಸ, ಸಂಜೆ 4 ಗಂಟೆಗೆ ಕನ್ನಡ ಜನಪದ ಕಲಾ ಪ್ರಕಾರಗಳ ಮೆರವಣಿಗೆ ಹಾಗೂ ಸಾಂಸ್ಕೃತಿಕ ನಡಿಗೆ, 5 ಗಂಟೆಗೆ ಗಡಿನಾಡು ಕನ್ನಡ ಉತ್ಸವದ ವೇದಿಕೆ ಕಾರ್ಯಕ್ರಮ ಮತ್ತು 7 ಗಂಟೆಗೆ ಗಡಿನಾಡು ಕನ್ನಡ ಸಂಗೀತೋತ್ಸವ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.