ಸಂತೇಮರಹಳ್ಳಿ: ಹೋಬಳಿ ಕೇಂದ್ರದಮಾರ್ಗವಾಗಿ ಮೈಸೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಕಮರವಾಡಿ ಗೇಟ್ ಬಳಿ ಗುರುವಾರ ಸಾಯಂಕಾಲಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, 10 ಜನರಿಗೆ ಗಾಯಗಳಾಗಿವೆ. ಮೂವರ ಸ್ಥಿತಿ ಗಂಭೀರವಾಗಿದೆ.
ಬಸ್ನಲ್ಲಿ ಮಕ್ಕಳು ಸೇರಿದಂತೆ 50 ಮಂದಿ ಪ್ರಯಾಣಿಸುತ್ತಿದ್ದರು. ಅದೃಷ್ಟವಶಾತ್ 40 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡವರನ್ನು ತಿ.ನರಸೀಪುರ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಾಮರಾಜನಗರದಿಂದ ಹೊಂಗನೂರು, ಚಾಟೀಪುರ ಹಾಗೂ ಯಳಂದೂರು ಮಾರ್ಗವಾಗಿ ಸಂತೇಮರಹಳ್ಳಿಯಿಂದ ಮೈಸೂರಿಗೆ ತೆರಳುತ್ತಿದ್ದ ಬಸ್ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಹಾಗಾಗಿ, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದು ಬಿದ್ದಿದೆ ಎಂದು ಮೂಲಗಳು ಹೇಳಿವೆ.
ತಕ್ಷಣಕ್ಕೆ ಗಾಯಗೊಂಡವರ ವಿವರ ತಿಳಿದು ಬಂದಿಲ್ಲ ಎಂದು ಸಂತೇಮರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.