ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸಗೊಬ್ಬರ ಹೆಚ್ಚಿನ ಬೆಲೆಗೆ ಮಾರಿದರೆ ಕ್ರಮ

ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಸೂಚನೆ
Last Updated 23 ಮೇ 2022, 15:34 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ರಸಗೊಬ್ಬರ ಸೇರಿದಂತೆ ಕೃಷಿ ಪರಿಕರಗಳನ್ನು ನಿಗದಿತ ಬೆಲೆಗಿಂತ ಹೆಚ್ಚುವರಿ ದರದಲ್ಲಿ ಮಾರಾಟ ಮಾಡುವವರು ಹಾಗೂ ಕೃತಕ ಅಭಾವ ಸೃಷ್ಟಿಸುವವರವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಕೃಷಿ ಅಧಿಕಾರಿಗಳಿಗೆ ಸೋಮವಾರ ಸೂಚಿಸಿದರು.

ಮುಂಗಾರು ಹಂಗಾಮಿನ ಸಿದ್ಧತೆಗಳ ಸಂಬಂಧ ಕೃಷಿ ಇಲಾಖೆ ಅಧಿಕಾರಿಗಳು, ರಸಗೊಬ್ಬರ ಜಿಲ್ಲಾ ಮಾರಾಟಗಾರರು ಹಾಗೂ ಸರಬರಾಜು ಸಂಸ್ಥೆ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದ ಅವರು, ‘ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ರಸಗೊಬ್ಬರ, ಬಿತ್ತನೆ ಬೀಜ ಸೇರಿದಂತೆ ಯಾವುದೇ ಪರಿಕರಗಳನ್ನು ರೈತರಿಗೆ ಅಗತ್ಯ ಪ್ರಮಾಣದಲ್ಲಿ ಸರಬರಾಜು ಮಾಡಬೇಕು. ಯಾವುದೇ ಭಾಗದಲ್ಲಿ ಕೊರತೆ ಕಾಡಬಾರದು‌’ ಎಂದರು.

‘ರಸಗೊಬ್ಬರ ಅಂಗಡಿಗಳಿಗೆ ಕೃಷಿ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಬೇಕು. ಪಾಯಿಂಟ್ ಆಫ್ ಸೇಲ್ (ಪಿಒಎಸ್) ವ್ಯವಸ್ಥೆಯ ಮುಖಾಂತರವೇ ರಸಗೊಬ್ಬರ ವಿತರಣೆಯಾಗಬೇಕು. ಇದರಿಂದ ಭೌತಿಕ ದಾಸ್ತಾನು ಹಾಗೂ ಮಾರಾಟ ಇನ್ನಿತರ ಮಾಹಿತಿಗಳು ಪಾರದರ್ಶಕವಾಗಿ ಇರಲಿವೆ. ಈ ವ್ಯವಸ್ಥೆಗೆ ಒತ್ತು ನೀಡಬೇಕು’ ಎಂದು ತಿಳಿಸಿದರು.

‘ಗುಣಮಟ್ಟದ ರಸಗೊಬ್ಬರ ಸೇರಿದಂತೆ ಇನ್ನಿತರ ಪರಿಕರಗಳನ್ನು ಮಾರಾಟ ಮಾಡಬೇಕು. ಅನಧಿಕೃತ ಮಾರಾಟಕ್ಕೆ ಅವಕಾಶ ನೀಡಬಾರದು. ಹೆಚ್ಚುವರಿ ದರ ಪಡೆಯುವುದು, ಅಭಾವ ಸೃಷ್ಟಿಸುವುದು ಸೇರಿದಂತೆ ಯಾವುದೇ ಉಲ್ಲಂಘನೆಗಳು ಕಂಡು ಬಂದರೆ ಅಂಗಡಿಗಳ ಪರವಾನಗಿ ಅಮಾನತು ಪಡಿಸಬೇಕು. ಗಂಭೀರ ಪ್ರಕರಣಗಳಿದ್ದಲ್ಲಿ ಪರವಾನಗಿ ರದ್ದು ಮಾಡಬೇಕು. ರೈತರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು’ ಎಂದು ಸೂಚಿಸಿದರು.

‘ಕೃಷಿ ಇಲಾಖೆ ಅಧಿಕಾರಿಗಳು ರಸಗೊಬ್ಬರ, ಇತರೆ ಪರಿಕರಗಳ ಅಂಗಡಿಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು. 15 ದಿನಗಳೊಳಗೆ ಜಿಲ್ಲೆಯ ಎಲ್ಲ ಅಂಗಡಿಗಳ ಪರಿಶೀಲನಾ ವರದಿಯನ್ನು ನೀಡಬೇಕು. ತಾಲ್ಲೂಕು ಹಂತದಲ್ಲಿಯೂ ರಸಗೊಬ್ಬರ ಪರಿಕರಗಳ ಮಾರಾಟಗಾರರುಹಾಗೂ ಸರಬರಾಜು ಸಂಸ್ಥೆಯ ಪ್ರತಿನಿಧಿಗಳ ಜೊತೆ ಸಭೆ ನಡೆಸಿ ಸುಗಮ ವ್ಯವಸ್ಥೆಗೆ ಮುಂದಾಗಬೇಕು’ ಎಂದು ತಿಳಿಸಿದರು.

ಜಂಟಿ ಕೃಷಿ ನಿರ್ದೇಶಕಿ ಎಚ್.ಟಿ.ಚಂದ್ರಕಲಾ, ಉಪನಿರ್ದೇಶಕಸೋಮಶೇಖರ್, ತಾಲ್ಲೂಕು ಕೃಷಿ ಸಹಾಯಕ ನಿರ್ದೇಶಕರು, ಜಿಲ್ಲಾ ರಸಗೊಬ್ಬರ ಮಾರಾಟಗಾರರು ಹಾಗೂ ಸರಬರಾಜು ಸಂಸ್ಥೆಯ ಪ್ರತಿನಿಧಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT