ಚಾಮರಾಜನಗರ: ಮರಾಠ ಅಭಿವೃದ್ದಿ ಪ್ರಾಧಿಕಾರ ರದ್ದುಪಡಿಸುವಂತೆ ಒತ್ತಾಯಿಸಿ ಕರ್ನಾಟಕ ಸೇನಾ ಪಡೆಯ ಕಾರ್ಯಕರ್ತರು ನಗರದಲ್ಲಿ ಗುರುವಾರ ಸಂಜೆ ಪಂಜಿನ ಮೆರವಣಿಗೆ ನಡೆಸಿದರು.
ಚಾಮರಾಜೇಶ್ವರ ಉದ್ಯಾನದ ಆವರಣದಲ್ಲಿ ಸೇರಿದ ಪ್ರತಿಭಟನಕಾರರು ಭುವನೇಶ್ವರಿ ವೃತ್ತದವರೆಗೆ ಮೆರವಣಿಗೆ ನಡೆಸಿ ಅಲ್ಲಿ ಕೆಲಕಾಲ ರಸ್ತೆ ತಡೆ ನಡೆಸಿ, ರಾಜ್ಯ ಸರ್ಕಾರ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಸನಗೌಡ ಪಾಟೀಲ ಯತ್ನಾಳ ವಿರುದ್ಧಧಿಕ್ಕಾರ ಕೂಗಿ ಅಕ್ರೋಶ ವ್ಯಕ್ತಪಡಿಸಿದರು.
ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರು ಮಾತನಾಡಿ, ‘ಕನ್ನಡ ವಿರೋಧಿಯಾಗಿರುವ ಮರಾಠಿಗರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಪ್ರಾಧಿಕಾರ ಸ್ಥಾಪನೆ ಮಾಡಿರುವುದುನ್ನು ಖಂಡಿಸಿ ವಾಟಾಳ್ ನಾಗರಾಜ್ ಹಾಗೂ ಕನ್ನಡ ಪರ ಸಂಘಟನೆಗಳ ಮುಖಂಡರು ಶನಿವಾರ (ಡಿ.5) ಕರೆದಿರುವ ಕರ್ನಾಟಕ ಬಂದ್ ಅನ್ನು ಬೆಂಬಲಿಸುತ್ತೇವೆ. ರಾಜ್ಯ ಸರ್ಕಾರ ತಕ್ಷಣವೇ ಮರಾಠ ಪ್ರಾಧಿಕಾರರಚಿಸುವ ಆದೇಶವನ್ನು ವಾಪಸ್ ಪಡೆಯಬೇಕು. ಕನ್ನಡಿಗರಲ್ಲಿ ಕ್ಷಮೆಯಾಚಿಸಬೇಕು’ ಎಂದರು.
‘ಕೇವಲ ಎರಡು ಶಾಸಕ ಸ್ಥಾನಕ್ಕಾಗಿ ಕರ್ನಾಟಕಕ್ಕೆ ದ್ರೋಹ ಮಾಡಲು ಸರ್ಕಾರ ಹೊರಟಿದೆ. ಬಂದ್ ಬೆಂಬಲಿಸಿ ನಗರದಲ್ಲಿ ಪ್ರತಿಭಟನೆ ನಡೆಸುತ್ತೇವೆ’ ಎಂದು ಹೇಳಿದರು.
ಶಾ.ಮುರಳಿ, ನಿಜಧ್ವನಿ ಗೋವಿಂದರಾಜು, ಗು.ಪುರುಷೋತ್ತಮ್, ಶಂಕರನಾಯಕ, ತಾಂಡವಮೂರ್ತಿ ಇದ್ದರು.