ಹನೂರು: ತಾಲ್ಲೂಕಿನ ಯಾತ್ರಾಸ್ಥಳ ಮಹದೇಶ್ವರ ಬೆಟ್ಟದ ಮಲೆಮಹದೇಶ್ವರ ಸ್ವಾಮಿಯ ದರ್ಶನಕ್ಕೆಂದು ಬರುತ್ತಿದ್ದ ಭಕ್ತರ ಕಾರು ತಾಳಬೆಟ್ಟ ಸಮೀಪ ಅಪಘಾತಕ್ಕೀಡಾಗಿ ಹೊತ್ತಿ ಉರಿದು ಆರು ಮಂದಿ ಗಾಯಗೊಂಡಿದ್ದಾರೆ.
ಭಾನುವಾರ ತಡ ರಾತ್ರಿ 1.30ರ ಸುಮಾರಿಗೆ ಘಟನೆ ನಡೆದಿದೆ.
ಘಟನೆಯಲ್ಲಿ ಮೈಸೂರು ಜಿಲ್ಲೆಯ ವಾಜ ಮಂಗಲ ಗ್ರಾಮದ ಬಸವರಾಜು (23) , ಗಣೇಶ್ ( 23) ನವೀನ್ (23) ಪ್ರತಾಪ್ (25) ಡಿ.ಶ್ರೀನಿವಾಸ್ (25) ಅಜಯ್ (22) ಎಂಬುವವರಿಗೆ ಗಾಯಗಳಾಗಿವೆ. ಬಸವರಾಜು ಮತ್ತು ಗಣೇಶ್ ಅವರಿಗೆ ಗಂಭೀರ ಗಾಯವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಗಾಯಾಳುಗಳನ್ನು ಕೊಳ್ಳೇಗಾಲ ಸರ್ಕಾರಿ ಉಪ ವಿಭಾಗ ಆಸ್ಪತ್ರೆಗೆದಾಖಲು ಮಾಡಲಾಗಿದೆ.
ಆರು ಮಂದಿ ಕಾರಿನಲ್ಲಿ ಮಹದೇಶ್ವರ ಬೆಟ್ಟಕ್ಕೆ ದೇವರ ದರ್ಶನಕ್ಕೆ ತೆರಳುತ್ತಿದ್ದರು. ಭಾನುವಾರ ರಾತ್ರಿ 1.30ರ ವೇಳೆಯಲ್ಲಿ ಕಾರು ಮರಕ್ಕೆ ಡಿಕ್ಕಿ ಹೊಡೆದು ಉರುಳಿ ಬಿತ್ತು. ನಂತರ ಕಾರಿನ ಎಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಘಟನಾ ಸ್ಥಳಕ್ಕೆ ಮಹದೇಶ್ವರ ಬೆಟ್ಟ ಠಾಣೆ ಪೊಲೀಸರು ಮತ್ತು ಅಗ್ನಿ ಶಾಮಕ ದಳದವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.