ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಕೀಲ ಅರುಣ್ ಕುಮಾರ್, ‘ಚಾಮರಾಜನಗರ ಜಿಲ್ಲೆಯ ಹರಿಹಾರ, ರಾಜ್ಯಕ್ಕೆ ಭರವಸೆಯ ನಾಯಕರಾಗಿದ್ದ ಧ್ರುವನಾರಾಯಣ ಅಕಾಲಿಕವಾಗಿ ನಮ್ಮನ್ನು ಅಗಲಿದ್ದಾರೆ. ಅವರ ದೂರದೃಷ್ಟಿಯ ಅಭಿವೃದ್ಧಿ ಕಾರ್ಯಗಳಿಂದ ಜಿಲ್ಲೆ ಅಭಿವೃದ್ಧಿ ಹೊಂದಿದೆ. 2004ರಲ್ಲಿ ಸಂತೇಮರಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಒಂದು ಮತದಿಂದ ಶಾಸಕರಾಗಿ ಆಯ್ಕೆಯಾದ ನಂತರ ಅವರು ಜಿಲ್ಲೆಯಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಾ ಬಂದಿದ್ದರು. ಎರಡು ಬಾರಿ ಶಾಸಕರಾಗಿ, ಎರಡು ಬಾರಿ ಸಂಸದರಾಗಿ ಜಿಲ್ಲೆಯಲ್ಲಿ ಕೇಂದ್ರೀಯ ವಿದ್ಯಾಲಯ, ಕೃಷಿ ಕಾಲೇಜು, ಕಾನೂನು ಕಾಲೇಜು ಸೇರಿದಂತೆ ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಒತ್ತು ಕೊಟ್ಟಿದ್ದರು. ಅಭಿವೃದ್ದಿಯಲ್ಲಿ ರಾಜ್ಯದ ನಂಬರ್ ಒನ್ ಸಂಸದರಾಗಿದ್ದರು’ ಎಂದರು.