ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚೀನಾ ವೈರಸ್‌; ಜಿಲ್ಲೆಯಲ್ಲೂ ಕಟ್ಟೆಚ್ಚರ: ಸಚಿವ ವೆಂಕಟೇಶ್‌

Published 30 ನವೆಂಬರ್ 2023, 15:47 IST
Last Updated 30 ನವೆಂಬರ್ 2023, 15:47 IST
ಅಕ್ಷರ ಗಾತ್ರ

ಚಾಮರಾಜನಗರ: ಚೀನಾದಲ್ಲಿ ಕಂಡು ಬಂದಿರುವ ನ್ಯುಮೋನಿಯಾ ವೈರಸ್‌ ಬಗ್ಗೆ ಜಿಲ್ಲೆಯಲ್ಲೂ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್‌ ಬುಧವಾರ ಹೇಳಿದರು. 

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಎಲ್ಲ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಸರ್ಕಾರ ಎಲ್ಲ ಜಿಲ್ಲಾಡಳಿತಗಳು ಮತ್ತು ಆರೋಗ್ಯ ಇಲಾಖೆಗೆ ಸೂಚನೆ ನೀಡಿದೆ. ಚಾಮರಾಜನಗರವು ಎರಡು ರಾಜ್ಯಗಳ ಜತೆ ಗಡಿ ಹಂಚಿಕೊಂಡಿರುವುದರಿಂದ ಹೆಚ್ಚು ಎಚ್ಚರ ವಹಿಸುವಂತೆ ಸೂಚನೆ ನೀಡಲಾಗಿದೆ’ ಎಂದರು. 

‘ಮುಂಜಾಗ್ರತಾ ಕ್ರಮವಾಗಿ ಆಸ್ಪತ್ರೆಯಲ್ಲಿ ಹೆಚ್ಚಿನ ಬೆಡ್ ಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಮುಂದಿನ ದಿನಗಳಲ್ಲಿ ತಮಿಳುನಾಡು ಹಾಗೂ ಕೇರಳ ರಾಜ್ಯದ ಗಡಿಯಲ್ಲಿ ಸಂಚರಿಸುವ ವಕ್ತಿಗಳ ಮೇಲೆ ವಿಶೇಷ ನಿಗಾ ವಹಿಸಲಾಗುವುದು. ಸದ್ಯ ಜಿಲ್ಲೆಯಲ್ಲಿ ಯಾವುದೇ ಭೀತಿ ಇಲ್ಲ. ಆರೋಗ್ಯ ಇಲಾಖೆ ಹಾಗೂ ಜಿಲ್ಲಾಡಳಿತ ಅಗತ್ಯ ಕ್ರಮ ವಹಿಸಿದೆ’ ಎಂದರು.

ಈಶ್ವರಪ್ಪ ಕನಸು ಕಾಣುತ್ತಿದ್ದಾರೆ: ಜಾತಿ ಗಣತಿ ಜಾರಿಯಾದರೆ ರಾಜ್ಯ ಸರ್ಕಾರ ಪತನವಾಗುತ್ತದೆ ಎಂದು ಬಿಜೆಪಿ ಮುಖಂಡ ಕೆ.ಎಸ್‌.ಈಶ್ವರಪ್ಪ ನೀಡಿರುವ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ‘ಈಶ್ವರಪ್ಪ ಕನಸು ಕಾಣುತ್ತಿದ್ದಾರೆ. ನಮ್ಮ ಸರ್ಕಾರ ಸ್ಥಿರವಾಗಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾರೆ. ಅವರೇ ಮುಂದುವರಿಯುತ್ತಿದ್ದಾರೆ. ಬದಲಾವಣೆ ಬೇಕು ಎಂದಾಗ ಹೈಕಮಾಂಡ್ ನೋಡಿಕೊಳ್ಳುತ್ತದೆ’ ಎಂದರು. 

ಲೋಕಸಭಾ ಚುನಾವಣೆಗೂ ಮುನ್ನ ಡಿ.ಕೆ.ಶಿವಕುಮಾರ್‌ ಜೈಲು ಸೇರುತ್ತಾರೆ ಎಂಬ ಈಶ್ವರಪ್ಪ ಹೇಳಿರುವ ಬಗ್ಗೆ ಕೇಳಿದ್ದಕ್ಕೆ, ‘ಇವರು ಈ ರೀತಿ ನಮ್ಮ ಅಧ್ಯಕ್ಷರನ್ನು ಜೈಲಿಗೆ ಹಾಕಿಸುತ್ತೇವೆ ಎಂದು ಹೇಳುವುದನ್ನು ನೋಡಿದರೆ, ಕೇಂದ್ರ ಸರ್ಕಾರ ಅದಕ್ಕೆ ಬೆಂಬಲ ನೀಡುತ್ತಿರುವಂತೆ ಕಾಣುತ್ತಿದೆ’ ಎಂದು ವೆಂಕಟೇಶ್‌ ಉತ್ತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT