ಮಹದೇಶ್ವರ ಬೆಟ್ಟ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡುವುದಕ್ಕೂ ಮುಂಚಿತವಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಸುರೇಶ್ ಕುಮಾರ್ ಅವರು ಮಂಗಳವಾರವೇ ಬೆಟ್ಟಕ್ಕೆ ಭೇಟಿ ನೀಡಿ ನಡೆಸಲಾಗಿರುವ ಸಿದ್ಧತೆಗಳನ್ನು ಪರಿಶೀಲಿಸಿದರು.
ಸಮಾರಂಭ ನಡೆಯುವ ರಂಗಮಂದಿರಕ್ಕೆ ಭೇಟಿ ನೀಡಿದ ಸಚಿವರು, ಅಲ್ಲಿ ನಿರ್ಮಿಸಲಾಗಿರುವ ವೇದಿಕೆ, ಹಾಕಲಾಗಿರುವ ಅಸನಗಳನ್ನು ವೀಕ್ಷಿಸಿದರು.ಹೆಲಿಪ್ಯಾಡ್ಗೆ ಭೇಟಿ ನೀಡಿ ಅಲ್ಲಿ ಕೈಗೊಂಡಿರುವ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಉದ್ಘಾಟನೆಗೆ ಸಿದ್ಧವಾಗಿರುವ ಅಂತರಗಂಗೆ ಸಮೀಪದ ಕಲ್ಯಾಣಿ, ವಾಣಿಜ್ಯ ಸಂಕೀರ್ಣದಲ್ಲಿ ನಿರ್ಮಿಸಿರುವ ಮಾಹಿತಿ ಕೇಂದ್ರ, ನಾಗಮಲೆ ಭವನದಲ್ಲಿ ನಿರ್ಮಿಸಿರುವ ವಿಡಿಯೊ ಕಾನ್ಫರೆನ್ಸ್ ಹಾಲ್, ಆಧುನಿಕ ಶೌಚಾಲಯಗಳ ಕಟ್ಟಡಗಳು ಸೇರಿದಂತೆ ಭಕ್ತಾದಿಗಳ ಅನುಕೂಲಕ್ಕೆ ನಿರ್ಮಿಸಿರುವ ಸೌಲಭ್ಯಗಳನ್ನು ವೀಕ್ಷಿಸಿದರು.
ನಂತರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ‘ಶಿಷ್ಟಾಚಾರ ಪಾಲನೆಯಾಗಬೇಕು. ಲೋಪಕ್ಕೆ ಅವಕಾಶವಾಗದ ಹಾಗೇ ಅಚ್ಚುಕಟ್ಟಾಗಿ ಕಾರ್ಯಕ್ರಮ ಯಶಸ್ವಿಗೊಳಿಸಲು ಎಲ್ಲ ಅವಶ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು’ ಎಂದು ಸೂಚನೆ ನೀಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್.ಆನಂದ್, ಮಲೆ ಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಸುರೇಂದ್ರ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಟಿ.ಜವರೇಗೌಡ ಸೇರಿದಂತೆ ಹಿರಿಯ ಅಧಿಕಾರಿಗಳು ಇದ್ದರು.