ಚಾಮರಾಜನಗರ: ರಾಜ್ಯದ ವಿಧಾನಸಭೆಯ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು, ಎಚ್.ಡಿ.ಕುಮಾರಸ್ವಾಮಿಯವರು ಜೆಡಿಎಸ್ ಅನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸುವುದಕ್ಕೆ ಬಿಜೆಪಿ ಹೈಕಮಾಂಡ್ ಕಾಯುತ್ತಿದೆಯೇ ಎಂದು ಕಾಂಗ್ರೆಸ್ ಮುಖಂಡ ವಿ.ಆರ್.ಸುದರ್ಶನ್ ವ್ಯಂಗ್ಯವಾಗಿ ಪ್ರಶ್ನಿಸಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಪ್ರಜಾಪ್ರಭುತ್ವ, ಸಂಸದೀಯ ವ್ಯವಸ್ಥೆಯಲ್ಲಿ ವಿರೋಧ ಪಕ್ಷದ ನಾಯಕನಿರುವುದು ಮುಖ್ಯ. ಸದನದಲ್ಲಿ ಸಭಾನಾಯಕ ಮತ್ತು ವಿರೋಧ ಪಕ್ಷದ ನಾಯಕ ಇದ್ದರೆ ಸಂಸದೀಯ ವ್ಯವಸ್ಥೆಗೆ ಅರ್ಥ ಬರುತ್ತದೆ. ಆದರೆ, ಬಿಜೆಪಿಗೆ ಇನ್ನೂ ನಾಯಕನನ್ನು ಆರಿಸಲು ಸಾಧ್ಯವಾಗಿಲ್ಲ. ಕುಮಾರಸ್ವಾಮಿ ಯವರನ್ನು ಮಾಡಲು ಅದು ಕಾಯುತ್ತಿದೆಯೇ? ಇದು ಹೌದು ಎಂದಾದರೆ ಅದನ್ನು ಬಹಿರಂಗವಾಗಿ ಹೇಳಲಿ' ಎಂದು ಸವಾಲು ಹಾಕಿದರು.
'ಕರ್ನಾಟಕಕ್ಕೆ ಏನು ಮಾಡಬೇಕು ಎಂಬುದು ಬಿಜೆಪಿ ಹೈಕಮಾಂಡ್ ಗೆ ಗೊತ್ತಿದೆ ಎಂದು ಅದರ ರಾಷ್ಟ್ರೀಯ ಮುಖಂಡರು ಹೇಳಿದ್ದಾರೆ. ಕರ್ನಾಟಕಕ್ಕೆ ಏನು ಬೇಕು ಎಂಬುದು ರಾಜ್ಯದ ಜನರಿಗೆ ಚೆನ್ನಾಗಿ ಗೊತ್ತಿದೆ. ಆ ಕಾರಣಕ್ಕೇ ಈ ಚುನಾವಣೆಯಲ್ಲಿ ಜನರು ಬಿಜೆಪಿಯನ್ನು ಸೋಲಿಸಿದ್ದಾರೆ' ಎಂದು ಟೀಕಿಸಿದರು.
'ಬಿಜೆಪಿಯವರು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡುತ್ತಾರೆ. ಅವರಿಗೆ ಮಾತನಾಡಲು ಏನು ನೈತಿಕತೆ ಇದೆ? ಚುನಾವಣೆಗೆ ಮೊದಲೇ ಗ್ಯಾರಂಟಿ ಯೋಜನೆಗಳನ್ನು ಪ್ರಣಾಳಿಕೆಯಲ್ಲಿ ಘೋಷಿಸಲಾಗಿತ್ತು. ಗ್ಯಾರಂಟಿ ಯೋಜನೆಗಳು ಜನಪ್ರಿಯ ಕಾರ್ಯಕ್ರಮಗಳಲ್ಲ; ಜನಪರ ಕಾರ್ಯಕ್ರಮಗಳು. ಜಾರಿಗೆ ಬಂದ ನಂತರ ಅವು ಜನಪ್ರಿಯವಾಗಿವೆ' ಎಂದು ಸುದರ್ಶನ್ ಹೇಳಿದರು.
ದೇಶದಲ್ಲಿ ಹೊಸ ಪರ್ವ: 'ಮುಂಬರುವ ಲೋಕಸಭಾ ಚುನಾವಣೆ ಬಳಿಕ ದೇಶದಲ್ಲಿ ಹೊಸ ಪರ್ವ ಆರಂಭವಾಗಲಿದೆ' ಎಂದು ಅವರು ಹೇಳಿದರು.
'ದೇಶದ ಜನರು ಪ್ರಜ್ಞಾವಂತರು. ಸಾಮಾನ್ಯ ಜನರಿಂದಲೇ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಯಾಗಿದೆ. ಜನರು ರಾಷ್ಟ್ರಮಟ್ಟದಲ್ಲೂ ಬದಲಾವಣೆ ಬಯಸುತ್ತಿದ್ದಾರೆ. ಇದೇ ಉದ್ದೇಶಕ್ಕೆ ವಿರೋಧ ಪಕ್ಷಗಳೆಲ್ಲ ಒಂದಾಗಿ 'ಇಂಡಿಯಾ' ರಚನೆ ಮಾಡಿಕೊಂಡಿವೆ. ಮಲ್ಲಿಕಾರ್ಜುನ ಖರ್ಗೆಯವರ ಅಧ್ಯಕ್ಷತೆಯಲ್ಲಿ ಇದು ಜನಾಂದೋಲನವಾಗಲಿದೆ' ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.