ಚಾಮರಾಜನಗರ: ಗುಂಡ್ಲುಪೇಟೆಯ ಕಬ್ಬೆಕಟ್ಟೆ ದೇವಸ್ಥಾನದಲ್ಲಿ ನಡೆದ ದಲಿತ ವ್ಯಕ್ತಿಯ ಬೆತ್ತಲೆ ಮೆರವಣಿಗೆ ಪ್ರಕರಣದ ಆರೋಪಿಗಳು ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆಯನ್ನು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯ ಅರ್ಜಿ ಗುರುವಾರಕ್ಕೆ (ಜೂನ್ 27) ಮುಂದೂಡಿದೆ.
ಪ್ರಕರಣದ 6 ಆರೋಪಿಗಳಾದ ಗುಂಡ್ಲುಪೇಟೆ ತಾಲ್ಲೂಕಿನ ಮಾಡ್ರಹಳ್ಳಿಯ ಶಿವಪ್ಪ, ಬಸವರಾಜು, ಮಾಣಿಕ್ಯ, ಸತೀಶ್, ಪುಟ್ಟಸ್ವಾಮಿ, ಚನ್ನಕೇಶವಮೂರ್ತಿ ಅವರ ಪರವಾಗಿ ಹಿರಿಯ ವಕೀಲರಾದಅರಳೀಕಟ್ಟೆ ಸಿದ್ದರಾಜು ಅವರು ಜಾಮೀನು ಅರ್ಜಿ ಸಲ್ಲಿಸಿದ್ದಾರೆ.
ಕಾಲಾವಕಾಶಕ್ಕೆ ಮನವಿ:ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ಜಿ.ಬಸವರಾಜ ಅವರು ಮಂಗಳವಾರ ಅರ್ಜಿ ವಿಚಾರಣೆ ನಡೆಸಿದರು.
ಪಬ್ಲಿಕ್ ಪ್ರಾಸಿಕ್ಯೂಟರ್ ಲೋಲಾಕ್ಷಿ ಅವರು, ‘ಪ್ರಕರಣಕ್ಕೆ ಸಂಬಂಧಿಸಿದ ಕಡತಗಳನ್ನು ಇನ್ನೂ ಪರಿಶೀಲಿಸಿಲ್ಲ. ಹಾಗಾಗಿ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೊಡಬೇಕು’ ಎಂದು ಮನವಿ ಮಾಡಿದರು. ಇದನ್ನು ಪುರಸ್ಕರಿಸಿದ ನ್ಯಾಯಾಧೀಶರು ಬುಧವಾರಕ್ಕೆ ವಿಚಾರಣೆಯನ್ನು ಮುಂದೂಡಿದರು.
ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯೂ ಅದೇ ದಿನಕ್ಕೆ ಮುಗಿಯಲಿದ್ದು, ಪೊಲೀಸರು ಅಂದು ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ನಿರೀಕ್ಷೆ ಇದೆ.