ಗುಂಡ್ಲುಪೇಟೆ: ಮಣ್ಣಿಗೆ ವಿಷ ಸೇರಿಸದೇ, ಭವಿಷ್ಯದ ದೃಷ್ಟಿಯಿಂದ ಮಣ್ಣಿನ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಬೇಕು’ ಎಂದು ಸಂಪನ್ಮೂಲ ವ್ಯಕ್ತಿ ಮುತ್ತೆಪ್ಪೆ ಚಿಗಡೊಳ್ಳಿ ತಿಳಿಸಿದರು.
ದೊಡ್ಡತುಪ್ಪೂರು ಗ್ರಾಮದಲ್ಲಿ ಚಾಮರಾಜನಗರ ಕೃಷಿ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದಡಿ ನಡೆದ ವಿಶ್ವ ಮಣ್ಣು ದಿನಾಚರಣೆಯಲ್ಲಿ ಅವರು ಮಾತನಾಡಿದರು. ಮಣ್ಣಿನ ಫಲವತ್ತತೆ ಕಾಪಾಡುವ ನಿಟ್ಟಿನಲ್ಲಿ ರೈತರು ಗಮನ ಹರಿಸಬೇಕು ಎಂದು ಸಲಹೆ ನೀಡಿದರು.
‘ಮಣ್ಣು ಮತ್ತು ನೀರು ಜೀವನದ ಮೂಲ’ ಈ ವರ್ಷದ ಘೋಷವಾಕ್ಯ. ಮಣ್ಣು ಸವಕಳಿ ಸವಕಳಿ ಆಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು. ರಾಸಾಯನಿಕ ಗೊಬ್ಬರಗಳನ್ನು ಕಡಿಮೆ ಮಾಡಿ, ಕೊಟ್ಟಿಗೆ ಗೊಬ್ಬರ ಮತ್ತು ಹಸಿರೆಲೆ ಗೊಬ್ಬರ ಬಳಸಿ, ಮಣ್ಣಿನ ಫಲವತ್ತತೆ ಹೆಚ್ಚಿಸಿಕೊಳ್ಳಬೇಕು ಎಂದು ತಿಳಿಸಿದರು.
ರಿಯಾಯಿತಿ ದರದಲ್ಲಿ ಗೊಬ್ಬರ ಖರೀದಿಸುವ ವಿಧಾನಗಳು ಮತ್ತು ಕೀಟನಾಶಕಗಳ ಸುರಕ್ಷಿತ ಬಳಕೆಯ ಬಗ್ಗೆ ರೈತರಿಗೆ ಅರಿವು ಮೂಡಿಸಲಾಯಿತು. ಬೇಸಾಯ ಶಾಸ್ತ್ರ ವಿಜ್ಞಾನಿ ಡಾ.ರಜತ್, ಕಾರ್ತಿಕ, ಅಭಿಷೇಕ್ , ರೈತರು, ಗ್ರಾಮಸ್ಥರು ಇದ್ದರು.