ಚಾಮರಾಜನಗರ: ‘ನಮ್ಮ ರೈಲು ಓಡುತ್ತಿದೆ. ಗಢ ಗಢ ನಡುಗುತ್ತಿಲ್ಲ. ಬಿದ್ದೂ ಹೋಗುವುದಿಲ್ಲ. ಬಿಜೆಪಿಯವರಿಗೆ ಯಾವ ಲಾಭವೂ ಆಗುವುದಿಲ್ಲ’ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಸೋಮವಾರ ಹೇಳಿದರು.
‘ಕಾಂಗ್ರೆಸ್ ಸರ್ಕಾರದ ಒಂದು ವರ್ಷದ ಸಾಧನೆ ಶೂನ್ಯ’ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿಕೆಗೆ ನಗರದಲ್ಲಿ ಪ್ರತಿಕ್ರಿಯಿಸಿದ ಅವರು, ‘ಒಂದು ವರ್ಷದ ಆಡಳಿತ ತೃಪ್ತಿ ತಂದಿದೆ. ಭರವಸೆ ನೀಡಿದಂತೆ ಗ್ಯಾರಂಟಿ ಯೋಜನೆಗಳನ್ನು ಈಡೇರಿಸಿದ್ದೇವೆ. 1.25 ಕೋಟಿ ಕುಟುಂಬಗಳಿಗೆ ಆರ್ಥಿಕ ಸ್ವಾವಲಂಬನೆಗೆ ಗ್ಯಾರಂಟಿ ಯೋಜನೆಗಳು ಸಹಕಾರಿಯಾಗಿದೆ’ ಎಂದರು.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಬಗ್ಗೆ ಎಲ್.ಶಿವರಾಮೇಗೌಡರು ನೀಡಿದ್ದಾರೆ ಎನ್ನಲಾದ ಲಘು ಹೇಳಿಕೆ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಇದೊಂದು ಮೂರ್ಖತನದ ಯೋಚನೆ. ದೇವೇಗೌಡರು ಈ ರಾಷ್ಟ್ರದ ಪ್ರಧಾನಿಯಾಗಿದ್ದವರು. ಪ್ರತಿಯೊಬ್ಬರು ಸಾರ್ಥಕ ಬದುಕು ಬದುಕಬೇಕು ಎಂದು ಆಶಿಸುವುದು ಮಾನವನ ಗುಣ. ಯಾವ ಮೂರ್ಖನೂ ಆ ರೀತಿ ಯೋಚನೆ ಮಾಡುವುದಿಲ್ಲ’ ಎಂದರು.
ಪ್ರಜ್ವಲ್ ರೇವಣ್ಣ ಪ್ರಕರಣದ ಎಸ್ಐಟಿ ತನಿಖೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಉನ್ನತ ಪೊಲೀಸ್ ಅಧಿಕಾರಿಗಳ ತಂಡ ತನಿಖೆ ನಡೆಸುತ್ತಿದೆ. ಕಾನೂನಾತ್ಮಕವಾಗಿ ತನ್ನ ಕೆಲಸ ಮಾಡುತ್ತದೆ. ಸರ್ಕಾರ ರಾಜಕೀಯ ಹಸ್ತಕ್ಷೇಪ ಮಾಡುವುದಿಲ್ಲ’ ಎಂದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಮಹದೇವಪ್ಪ, ‘ಕೊಲೆಗಳು ಎಲ್ಲಿ ಆಗುತ್ತಿವೆ? ಕಾನೂನು ಸುವ್ಯವಸ್ಥೆ ಸಮರ್ಪಕವಾಗಿದೆ. ಅಂತೆ ಕಂತೆಗಳನ್ನು ನಾವು ಮಾತನಾಡುವುದಕ್ಕೆ ಆಗುವುದಿಲ್ಲ. ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳುತ್ತದೆ’ ಎಂದರು.
‘ಸಂಪುಟ ಪುನರ್ರಚನೆ ನಮ್ಮ ಕೆಲಸವಲ್ಲ. ಹೈಕಮಾಂಡ್ ಗೆ ಬಿಟ್ಟ ವಿಚಾರ’ ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು.