ಕೊಳ್ಳೇಗಾಲ: ‘ಮೆಗಾ ಆರೋಗ್ಯ ತಪಾಸಣಾ ಶಿಬಿರವು ಬಹಳ ಯಶಸ್ವಿಯಾಗಿ ನಡೆಯಬೇಕು’ ಎಂದು ಜಿಲ್ಲಾಧಿಕಾರಿ ಶಿಲ್ಪನಾಗ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಎಂ.ಜಿ.ಎಸ್.ವಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಜ.29ರಂದು ನಡೆಯುವ ಮೆಗಾ ಆರೋಗ್ಯ ತಪಾಸಣಾ ಶಿಬಿರ ಜಾಗ ವೀಕ್ಷಿಸಿ ಅವರು ಮಾತನಾಡಿದರು.
‘ಸುಮಾರು 5 ಸಾವಿರ ಜನರು ಶಿಬಿರದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಆದ್ದರಿಂದ ಸಾರ್ವಜನಿಕರಿಗೆ ಒದಗಿಸುವ ಮೂಲ ಸೌಕರ್ಯಗಳ ವ್ಯವಸ್ಥೆಯಲ್ಲಿ ಸಮಸ್ಯೆ ಆಗದಂತೆ ಕ್ರಮವಹಿಸಬೇಕು. ನಗರಸಭೆ ಅಧಿಕಾರಿಗಳು ಸ್ವಚ್ಛತೆ ಕಾರ್ಯಕ್ರಮ ನಡೆಸಬೇಕು. ಶಿಬಿರ ಬೆಳಿಗ್ಗೆ 7 ಗಂಟೆಗೆ ಪ್ರಾರಂಭವಾಗಲಿದೆ. 10 ಗಂಟೆಗೆ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಆರೋಗ್ಯ ಸಚಿವರು ಹಾಗೂ ಸ್ಥಳೀಯ ಶಾಸಕರು ಉಪಸ್ಥಿತರಿರುವರು’ ಎಂದು ವಿವರಿಸಿದರು.
‘ಈಗಾಗಲೇ ಆರೋಗ್ಯ ಸಚಿವ ದಿನೇಶ್ ಗುಂಡು ರಾವ್ ಅವರು ಈ ಬಗ್ಗೆ ಸಭೆ ನಡೆಸಿ ಹಲವು ನಿರ್ದೇಶನಗಳನ್ನು ನೀಡಿದ್ದಾರೆ. ಅದರಂತೆಯೇ, ಶಿಬಿರ ಆಯೋಜನೆಯಾಗಲಿದೆ. 5 ಸಾವಿರ ಜನರು ಭಾಗಿಯಾಗುವ ನಿರೀಕ್ಷೆಯಿದೆ. ಸಿಎಚ್ಸಿ ಹಾಗೂ ಪಿಎಚ್ಸಿ ಕೇಂದ್ರಗಳಲ್ಲಿ ಪ್ರಾಥಮಿಕ ಸ್ಕ್ರೀನಿಂಗ್ ಪ್ರಾರಂಭವಾಗಿದೆ. ಬೇರೆ ತಾಲ್ಲೂಕಿನಿಂದ ಬರುವವರಿಗೆ ಸ್ಥಳದಲ್ಲಿಯೇ ನೋಂದಣಿ ಮಾಡಿ ತಪಾಸಣೆಗೆ ಅವಕಾಶ ಮಾಡುವಂತೆ ಸೂಚನೆ ನೀಡಿದ್ದೇನೆ. ಉಚಿತವಾಗಿ ಔಷಧ ವ್ಯವಸ್ಥೆ ಮಾಡಲಾಗುತ್ತಿದೆ. ಪ್ರತಿಷ್ಠಿತ ಆಸ್ಪತ್ರೆಗಳಿಂದ ವೈದ್ಯರು ಹಾಗೂ ಸಿಬ್ಬಂದಿ ಬರುತ್ತಿದ್ದಾರೆ. ಗ್ರಾಮೀಣ ಪ್ರದೇಶಗಳಿಂದ ಬರುವವರಿಗೆ 60 ಮಿನಿ ಬಸ್ ವ್ಯವಸ್ಥೆ ಮಾಡಲಾಗಿದೆ. ಈ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು’ ಎಂದರು.
ಸಿಇಒ ಆನಂದ ಪ್ರಕಾಶ್ ಮೀನಾ , ಡಿಎಚ್ಒ ಚಿದಬರಂ, ಉಪವಿಭಾಗಧಿಕಾರಿ ಬಿ.ಆರ್.ಮಹೇಶ್, ತಹಶೀಲ್ದಾರ್ ಮಂಜುಳಾ, ಟಿಎಚ್ಒ ಗೋಪಾಲ್, ಉಪವಿಭಾಗ ಆಸ್ಪತ್ರೆಯ ಆಡಳಿತ ಅಧಿಕಾರಿ ಡಾ.ರಾಜಶೇಖರ್, ನಗರಸಭೆ ಆಯುಕ್ತ ಎ.ರಮೇಶ್ ಇದ್ದರು.