ಗುಂಡ್ಲುಪೇಟೆ (ಚಾಮರಾಜನಗರ): ‘ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನಗಳನ್ನು ಗೆದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜಕೀಯವಾಗಿ ಹೆಚ್ಚು ಶಕ್ತಿ ಬರಲಿದೆ. ಇನ್ನೂ ಐದು ವರ್ಷಗಳ ಕಾಲ ಅವರು ಬಡವರು, ದಲಿತರು ಮತ್ತು ಮಹಿಳೆಯರ ಪರವಾಗಿ ದಿಟ್ಟ ನಿರ್ಧಾರ ತೆಗೆದುಕೊಳ್ಳಲು ಅನುಕೂಲವಾಗುತ್ತದೆ’ ಎಂದು ವರುಣ ಕ್ಷೇತ್ರದ ಆಶ್ರಯ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ ಶನಿವಾರ ಪುನರುಚ್ಚರಿಸಿದರು.
ಪಟ್ಟಣದಲ್ಲಿ ಶನಿವಾರ ನಡೆದ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, ‘ಸರ್ಕಾರ ರಚನೆಯಾದ ಎಂಟು ತಿಂಗಳಲ್ಲೇ ಐದೂ ಗ್ಯಾರಂಟಿಗಳನ್ನು ಈಡೇರಿಸಲಾಗಿದೆ. ಈ ಯೋಜನೆಗಳು ಐದು ವರ್ಷಗಳ ಕಾಲ ಮುಂದುವರಿಯಬೇಕೆಂದರೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಹೆಚ್ಚು ಬೆಂಬಲ ಕೊಡಬೇಕು’ ಎಂದರು.
ಅಧಿಕಾರದಿಂದ ಕೆಳಗಿಳಿಸಲು ಹುನ್ನಾರ
ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ ಮಾತನಾಡಿ, ‘ಬಡವರ, ಹಿಂದುಳಿದವರ ಮತ್ತು ಅಲ್ಪಸಂಖ್ಯಾತರ ಪರವಿರುವ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸುವ ಹುನ್ನಾರ ನಡೆಯುತ್ತಿದೆ. ಆದರೆ, ಅದು ಸಫಲವಾಗುವುದಿಲ್ಲ’ ಎಂದರು.
‘ಚುನಾವಣೆಗೂ ಮುನ್ನ ನೀಡಿದ ಭರವಸೆಯಂತೆ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಮೂಲಕ ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತಿರುವ ವ್ಯಕ್ತಿ ಸಿದ್ದರಾಮಯ್ಯ’ ಎಂದರು.