ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾನಪದ ಕಲೆಗೆ ಪ್ರೋತ್ಸಾಹ ಅಗತ್ಯ: ಪುಟ್ಟರಂಗಶೆಟ್ಟಿ

ಜನಪರ ಉತ್ಸವದಲ್ಲಿ ಕಲಾ ತಂಡಗಳ ಮೆರವಣಿಗೆ
Last Updated 31 ಜನವರಿ 2023, 16:27 IST
ಅಕ್ಷರ ಗಾತ್ರ

ಚಾಮರಾಜನಗರ: ‘ಜಿಲ್ಲೆಯಲ್ಲಿ ಪ್ರತಿಭಾನ್ವಿತ ಜಾನಪದ ಕಲಾವಿದರಿದ್ದು, ಜನಪದ ಕಲೆಗಳಿಗೆ ಹೆಚ್ಚು ಒತ್ತು, ಪ್ರೋತ್ಸಾಹ ನೀಡಬೇಕಿದೆ’ ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ಮಂಗಳವಾರ ತಿಳಿಸಿದರು.

ಜಿಲ್ಲಾಡಳಿತ ಭವನದ ಆವರಣದಲ್ಲಿರುವ ವರನಟ ಡಾ.ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆಯೋಜಿಸಲಾಗಿದ್ದ ಜನಪರ ಉತ್ಸವದಲ್ಲಿ ಅವರು ಮಾತನಾಡಿದರು.

‘ಭಜನೆ, ತತ್ವ ಪದಗಳು, ಸೋಬಾನೆ ಸೇರಿದಂತೆ ಅನೇಕ ಜನಪದ ಕಲೆಗಳಿಗೆ ಜಿಲ್ಲೆ ಹೆಸರುವಾಸಿಯಾಗಿದೆ. ಇಲ್ಲಿನ ಕಲಾವಿದರ ಜನಪದ ಹಾಡುಗಳನ್ನು ಎಷ್ಟು ಆಸ್ವಾದಿಸಿದರೂ ಮತ್ತೆ ಮತ್ತೆ ಕೇಳಬೇಕು ಎನಿಸುತ್ತದೆ. ಸ್ಥಳೀಯ ಜಾನಪದ ಕಲೆ, ಸಂಸ್ಕೃತಿ ಬೆಳೆಯಲು ಉತ್ತೇಜನ ಮುಂದುವರಿಸಬೇಕಿದೆ’ ಎಂದರು.

‘ಜಾನಪದ ಕಲೆಗಳ ಸಾರ ಹೆಚ್ಚು ಅರ್ಥಪೂರ್ಣವಾಗಿದೆ. ಇವುಗಳಲ್ಲಿ ಒಳ್ಳೆಯ ಅಂಶಗಳಿವೆ. ಕಲಾವಿದರಿಗೆ ಅವಕಾಶ ನೀಡುವ ಕಾರ್ಯಕ್ರಮಗಳು ಸಹಕಾರಿಯಾಗಲಿವೆ. ಹೀಗಾಗಿ ಇಲ್ಲಿನ ಕಲೆ, ಸಂಸ್ಕೃತಿಗೆ ವಿಶೇಷ ಮಹತ್ವ ನೀಡಬೇಕು’ ಎಂದು ಸಿ.ಪುಟ್ಟರಂಗಶೆಟ್ಟಿ ಹೇಳಿದರು.

ನಗರಸಭೆ ಅಧ್ಯಕ್ಷೆ ಸಿ.ಎಂ.ಆಶಾ ಮಾತನಾಡಿ ‘ಜನಪದ ಕಲೆಗಳು ನಶಿಸಿ ಹೋಗುತ್ತಿರುವ ಇಂದಿನ ದಿನಗಳಲ್ಲಿ ನಮ್ಮ ಜನಪದ ಸಂಸ್ಕೃತಿ ಉಳಿಸಿ ಪೋಷಿಸಬೇಕು. ಈಚಿನ ದಿನಗಳಲ್ಲಿ ನಮ್ಮ ಸಂಸ್ಕೃತಿ ಮರೆತು ಅನ್ಯ ಸಂಸ್ಕೃತಿಯ ಪ್ರಭಾವಕ್ಕೆ ಒಳಗಾಗುತ್ತಿದ್ದೇವೆ. ಯಾವುದೇ ಅರಿವು ಇಲ್ಲದ ಮುಂದಿನ ಪೀಳಿಗೆಯವರಿಗೆ ಸ್ಥಳೀಯ ಪರಂಪರೆ ಬಗ್ಗೆ ತಿಳಿಸಿಕೊಡಬೇಕಿದೆ’ ಎಂದರು.

ಜಾನಪದ ಕಲಾವಿದ ಸಿ.ಎಂ.ನರಸಿಂಹಮೂರ್ತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಎ.ರಮೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎನ್.ಗುರುಲಿಂಗಯ್ಯ ಇದ್ದರು.

ಉದ್ಘಾಟನಾ ಕಾರ್ಯಕ್ರಮಕ್ಕೂ ಮೊದಲು ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಗಣ್ಯರು ಕಲಾತಂಡಗಳ ಮೆರವಣಿಗೆಗೆ ಚಾಲನೆ ನೀಡಿದರು. ದೇವಸ್ಥಾನದಿಂದ ಹೊರಟ ಮೆರವಣಿಗೆ ಬಿ.ರಾಚಯ್ಯ ಜೋಡಿ ರಸ್ತೆ ಮೂಲಕ ಸಾಗಿ ವರನಟ ಡಾ.ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಮುಕ್ತಾಯಗೊಂಡಿತು.

ಜಾನಪದ ವಿ.ವಿ: ಸಿ.ಎಂ ಗೆ ಮನವಿ
ಕಾವೇರಿ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜಿ.ನಿಜಗುಣರಾಜು ಮಾತನಾಡಿ ‘ಚಾಮರಾಜನಗರ ಎಂದ ಕೂಡಲೇ ಜಾನಪದ ತವರೂರು ಎಂದು ನೆನಪಾಗುತ್ತದೆ. ಮಲೆ ಮಹದೇಶ್ವರರು, ಸಿದ್ದಾಪ್ಪಾಜಿಯ ನೆಲೆಯಾಗಿರುವ ಜಿಲ್ಲೆ ಜಾನಪದ ಕಲೆಗಳಿಂದ ಗುರುತಿಸಿಕೊಂಡಿದೆ’ ಎಂದರು.

‘ದಾಸ ಸಾಹಿತ್ಯ, ಕನ್ನಡ ಸಾಹಿತ್ಯ, ವಚನ ಸಾಹಿತ್ಯಗಳ ರೀತಿಯಲ್ಲಿ ಜಾನಪದ ಸಾಹಿತ್ಯಕ್ಕೂ ತನ್ನದೇ ಆದ ವಿಶೇಷತೆ ಇದೆ. ಇಂತಹ ಅಮೂಲ್ಯ ಪರಂಪರೆ ಮುಂದಿನ ಪೀಳಿಗೆಗೂ ತಲುಪಬೇಕಿದೆ. ಮುಖ್ಯಮಂತ್ರಿಯವರನ್ನು ಭೇಟಿಯಾಗುವ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲೆಯಲ್ಲೂ ಜಾನಪದ ವಿಶ್ವವಿದ್ಯಾಲಯ ಸ್ಥಾಪಿಸಲು ಮನವಿ ಮಾಡಲಾಗುವುದು’ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT