ಚಾಮರಾಜನಗರ: ಹಾಸನದ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರ ದುರ್ಬಳಕೆ ಮಾಡಿಕೊಂಡಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
ನಗರದ ಚಾಮರಾಜೇಶ್ವರ ಸ್ವಾಮಿ ದೇವಾಲಯದ ಮುಂಭಾಗದಲ್ಲಿ ಸೇರಿದ ಪ್ರತಿಭಟನಕಾರರು ಭುವನೇಶ್ವರಿ ವೃತ್ತದವರೆಗೆ ಮೆರವಣಿಗೆ ನಡೆಸಿ ರಾಜ್ಯ ಕಾಂಗ್ರೆಸ್ ಸರ್ಕಾರ, ಡಿ.ಕೆ.ಶಿವಕುಮಾರ್ ವಿರುದ್ಧ ಘೋಷಣೆ ಕೂಗಿದರು.
ಡಿ.ಕೆ.ಶಿವಕುಮಾರ್ ಅವರ ಭಾವಚಿತ್ರವನ್ನು ಪ್ರತಿಭಟನಕಾರರು ಸುಡಲು ಮುಂದಾದಾಗ ಪೊಲೀಸರು ತಡೆದರು. ಈ ಸಂದರ್ಭದಲ್ಲಿ ನೂಕಾಟ, ತಳ್ಳಾಟ ಉಂಟಾಯಿತು.
ಜೆಡಿಎಸ್ ಮುಖಂಡ ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರ ಉಸ್ತುವಾರಿ ಬಿ.ಪುಟ್ಟಸ್ವಾಮಿ ಮಾತನಾಡಿ, ‘ಪೆನ್ಡ್ರೈವ್ ಪ್ರಕರಣದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರ ದುರುಪಯೋಗ ಪಡಿಸಿಕೊಂಡಿದೆ. ಕಾಂಗ್ರೆಸ್ನವರು ಪೆನ್ಡ್ರೈವ್ಗಳನ್ನು ಹಂಚಿ ಮಹಿಳೆಯರ ಮಾನ ಹಾನಿಮಾಡಿದ್ದಾರೆ. ಪೆನ್ಡ್ರೈವ್ಗಳನ್ನು ಹಂಚಿದವರನ್ನು ಹೊರದೇಶಕ್ಕೆ ಕಳುಹಿಸಿದ್ದಾರೆ. ತಪ್ಪಿತಸ್ಥರನ್ನು ಶಿಕ್ಷಿಸುವುದು ಬಿಟ್ಟು, ಅಮಾಯಕರನ್ನು ಬಂಧಿಸಿದ್ದಾರೆ’ ಎಂದು ಆರೋಪಿಸಿದರು.
‘ಕಾಂಗ್ರೆಸ್ ಪಕ್ಷವು ಎಸ್ಐಟಿಯನ್ನು ಬಳಸಿಕೊಂಡು ನಿಜವಾದ ಅಪರಾಧಿಗಳನ್ನು ಬಂಧಿಸುವುದು ಬಿಟ್ಟು, ನಿರಪರಾಧಿಗಳನ್ನು ಬಂಧಿಸುತ್ತಿದೆ. ಉಪ ಮುಖ್ಯಮಂತ್ರಿ ಅವರ ಆಡಿಯೊವೇ ಇದಕ್ಕೆ ಸಾಕ್ಷಿ. ಅವರು ತಕ್ಷಣ ರಾಜೀನಾಮೆ ನೀಡಬೇಕು. ಪೆನ್ಡ್ರೈವ್ ಹಂಚಿ ಮಹಿಳೆಯರ ಮಾನ ಹಾನಿ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.
‘ಮುಖಂಡ ಕಡಬೂರು ಮಂಜುನಾಥ್ ಮಾತನಾಡಿ, ‘ಪ್ರಜ್ವಲ್ ರೇವಣ್ಣ ತಪ್ಪು ಮಾಡಿದ್ದರೆ, ಅವರನ್ನು ಗಲ್ಲಿಗೇರಿಸಲಿ. ಅದಕ್ಕೆ ನಮ್ಮ ಸಹಮತ ಇದೆ. ಆದರೆ, ಎಸ್ಐಟಿ ತಂಡವು ಡಿಕೆಶಿ ತನಿಖಾ ತಂಡವಾಗಿದೆ. ಹಾಗಾಗಿ ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು’ ಎಂದು ಆಗ್ರಹಿಸಿದರು.