ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲಾ ಆಸ್ಪತ್ರೆಗೆ ನ್ಯಾಯಾಧೀಶರ ಭೇಟಿ: ಪರಿಶೀಲನೆ

Last Updated 17 ಆಗಸ್ಟ್ 2022, 15:52 IST
ಅಕ್ಷರ ಗಾತ್ರ

ಚಾಮರಾಜನಗರ: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ. ಶ್ರೀಧರ ಅವರು ಬುಧವಾರ ನಗರದ ಬಿ. ರಾಚಯ್ಯ ಜೋಡಿ ರಸ್ತೆಯಲ್ಲಿರುವ ಜಿಲ್ಲಾಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು.

ಆಸ್ಪತ್ರೆಯ ಸ್ಥಾನಿಕ ವೈದ್ಯಾಧಿಕಾರಿ ಡಾ. ಪ್ರದೀಪ್ ಅವರ ಜೊತೆ ಆಸ್ಪತ್ರೆಯ ಎಲ್ಲ ಕೊಠಡಿಗಳಿಗೂ ಭೇಟಿ ನೀಡಿದರು. ಆಸ್ಪತ್ರೆಯ ಆವರಣದ ಸ್ವಚ್ಛತೆ, ಎಲ್ಲ ವಾರ್ಡ್, ಶೌಚಾಲಯ ಹಾಗೂ ಹೊರಾಂಗಣದ ಸ್ವಚ್ಛತೆಗೆ ಆದ್ಯತೆ ನೀಡುವಂತೆ ಸೂಚಿಸಿದರು.

ಆಸ್ಪತ್ರೆಯಲ್ಲಿ ದಾಖಲಾಗಿರುವ ರೋಗಿಗಳಿಗೆ ದೊರೆಯುತ್ತಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದ ಅವರು, ‘ರೋಗಿಗಳಿಗೆ ಗುಣಮಟ್ಟದ ಔಷಧ ಹಾಗೂ ಪೌಷ್ಟಿಕ ಆಹಾರ ನೀಡಬೇಕು. ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಶೌಚಾಲಯದ ನೈರ್ಮಲ್ಯ ನಿರ್ವಹಣೆಗೆ ಸಮರ್ಪಕ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

ಆಸ್ಪತ್ರೆಯ ಆವರಣದಲ್ಲಿ ರೋಗಿಗಳನ್ನು ಬಿಟ್ಟು ಹೆಚ್ಚು ಜನಸಂದಣಿ ಆಗಬಾರದು. ಹೆಚ್ಚು ಜನರಿಂದ ರೋಗಿಗಳಿಗೆ ಉಂಟಾಗುವ ಅನನುಕೂಲವನ್ನು ತಪ್ಪಿಸಬೇಕು ಎಂದರು.

ಆಸ್ಪತ್ರೆಯ ಆವರಣದಲ್ಲಿರುವ ಸಖಿ ಕೇಂದ್ರಕ್ಕೆ ಭೇಟಿ ನೀಡಿ, ಕೇಂದ್ರದ ಸಿಬ್ಬಂದಿ ಮತ್ತು ಸಮಾಲೋಚಕರ ಕಾರ್ಯವೈಖರಿ ಬಗ್ಗೆಯೂ ಶ್ರೀಧರ ಅವರು ಪರಿಶೀಲಿಸಿದರು.

‘ದೌರ್ಜನ್ಯಕ್ಕೆ ಒಳಗಾಗಿ ಬರುವ ಸಂತ್ರಸ್ತರೊಂದಿಗೆ ಸಮಾಲೋಚನೆ ನಡೆಸಿ, ವೈದ್ಯಕೀಯ ಚಿಕಿತ್ಸೆಯೊಂದಿಗೆ ತುರ್ತು ಕಾನೂನು ನೆರವು ಒದಗಿಸಲು ಮತ್ತು ಅವರ ಪುನರ್ವಸತಿಗೆ ವಿಳಂಬ ಮಾಡದೇ ಸಹಕರಿಸಬೇಕು’ ಎಂದು ನ್ಯಾಯಾಧೀಶರು ಸೂಚಿಸಿದರು.

‘ಮಾನವೀಯತೆ ದೃಷ್ಟಿಯಿಂದ ಆಸ್ಪತ್ರೆಗೆ ದಾಖಲಾಗುವ ಮಹಿಳೆಯರಿಗೆ, ಗರ್ಭಿಣಿಯರಿಗೆ ಉತ್ತಮವಾದ ಪರಿಸರದ ವಾತಾವರಣ ಕಲ್ಪಿಸಿ, ವೈದ್ಯಕೀಯ ಚಿಕಿತ್ಸೆ ನೀಡಬೇಕು. ಆಸ್ಪತ್ರೆಗೆ ಚಿಕಿತ್ಸೆ ಪಡೆಯಲು ಬರುವ ಸಾರ್ವಜನಿಕರಿಗೆ ಕಾನೂನಿನ ನೆರವಿನ ಅಗತ್ಯವಿದ್ದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವನ್ನು ಸಂಪರ್ಕಿಸಲು ತಿಳಿಸಬೇಕು’ ಎಂದು ವೈದ್ಯಾಧಿಕಾರಿಗಳಿಗೆ ಶ್ರೀಧರ ಸಲಹೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT