ಯಳಂದೂರು: ‘ವಿಧಾನಸಭಾ ಚುನಾವಣೆಯಲ್ಲಿ ಶಕ್ತಿ ಮೀರಿ ಕೆಲಸ ಮಾಡಿದ ಬಿಜೆಪಿ ಕಾರ್ಯಕರ್ತರು ಪಕ್ಷದ ಸೋಲಿಗೆ ಧೃತಿಗೆಡಬೇಕಿಲ್ಲ. ಮುಂದಿನ ಚುನಾವಣೆಗಳಲ್ಲಿ ಒಗ್ಗಟ್ಟಿನಿಂದ ಕೆಲಸ ನಿರ್ವಹಿಸಬೇಕಿದೆ’ ಎಂದು ಮಾಜಿ ಶಾಸಕ ಎನ್.ಮಹೇಶ್ ಹೇಳಿದರು.
ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಕೃತಜ್ಞತಾ ಸಭೆಯಲ್ಲಿ ಅವರು ಮಾತನಾಡಿದರು.
‘ಪಕ್ಷ ಮತ್ತು ನಮ್ಮ ಕೆಲಸ ನೋಡಿ ಸಾವಿರಾರು ಮತ ನೀಡಿದ ಮತದಾರರಿಗೆ ಕೃತಜ್ಞತೆ ಸಲ್ಲಿಸಬೇಕು. ಮುಂದಿನ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಒಮ್ಮತ ಪ್ರದರ್ಶಿಸಬೇಕು. ಸಭೆಗೆ ನಿರೀಕ್ಷೆಗೂ ಮೀರಿ ಕಾರ್ಯಕರ್ತರು ಬಂದಿದ್ದು. ಇದು ನಮ್ಮ ಆತ್ಮವಿಶ್ವಾಸವನ್ನು ಇಮ್ಮಡಿಸಿದೆ’ ಎಂದು ಹೇಳಿದರು.
ಮಾಜಿ ಶಾಸಕ ಎಸ್.ಬಾಲರಾಜು, ಚಿತ್ರ ನಿರ್ದೇಶಕ ಮಹೇಂದರ್, ಪ.ಪಂ. ಸದಸ್ಯರಾದ ಮಹೇಶ್, ರಘು, ಮಂಡಲ ಅಧ್ಯಕ್ಷ ಮಹೇಶ್, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್, ಮುಖಂಡರಾದ ಜಖಾವುಲ್ಲಾ, ಮಾಂಬಳ್ಳಿ ರಾಮಣ್ಣ, ರಾಜಪ್ಪ, ರಾಜೇಂದ್ರ ಪ್ರಸಾದ್, ದುಗ್ಗಟ್ಟಿ ಮಾದೇಶ್ ಇದ್ದರು.