ಚಾಮರಾಜನಗರ: ರಾಜ್ಯದಲ್ಲಿ ಕೋವಿಡ್ ಹಾಗೂ ಓಮೈಕ್ರಾನ್ ಪ್ರಕರಣ ಹೆಚ್ಚಾಗುತ್ತಿರುವುದರಿಂದ, ರಾಜ್ಯದಾದ್ಯಂತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳನ್ನು ಮುಚ್ಚಬೇಕು ಹಾಗೂ ರಾಜ್ಯಕ್ಕೆ ಹೊಂದಿಕೊಂಡಿರುವ ಮಹಾರಾಷ್ಟ್ರ, ಕೇರಳ ಗಡಿಗಳನ್ನು ಬಂದ್ ಮಾಡಬೇಕು ಎಂದು ಕರ್ನಾಟಕ ಸೇನಾಪಡೆ ಸರ್ಕಾರವನ್ನು ಆಗ್ರಹಿಸಿದೆ.
ಸೇನಾಪಡೆಯ ಪದಾಧಿಕಾರಿಗಳು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರನ್ನು ಭೇಟಿ ಮಾಡಿ, ಅವರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಕೋವಿಡ್ ಮೂರನೇ ಅಲೆ ತಡೆಗೆ ರಾಜ್ಯ ಸರ್ಕಾರ ಕಠಿಣ ನಿರ್ಬಂಧ ವಿಧಿಸಿರುವುದು ಸ್ವಾಗ ತಾರ್ಹ.ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ನಗರದಲ್ಲಿನ ಶಾಲೆ ಗಳನ್ನು ಮಾತ್ರ ಮುಚ್ಚಲಾಗಿದೆ. ಮೂರನೇ ಅಲೆಯು ರಾಜ್ಯದಾದ್ಯಂತ ಹರಡುವ ಸಾಧ್ಯತೆ ಇರುವುದರಿಂದ, ಇಡೀ ರಾಜ್ಯದಲ್ಲಿ ಪ್ರಾಥಮಿಕ–ಪ್ರೌಢಶಾಲೆ ಗಳನ್ನು ಬಂದ್ ಮಾಡಬೇಕು ಎಂದು ಅವರು ಮನವಿಯಲ್ಲಿ ಒತ್ತಾಯಿಸಿದ್ದಾರೆ.
‘ತಜ್ಞರ ಶಿಫಾರಸಿನಂತೆ ಪ್ರತಿ ಭಟನೆ, ರಾಜಕೀಯ ಸಮಾರಂಭ, ಮನ ರಂಜನಾ ಕಾರ್ಯಕ್ರಮ, ಜಾತ್ರೆಗಳಿಗೆ ನಿರ್ಬಂಧ ಹೇರಲಾಗಿದೆ. ಇದೇ ಮಾದರಿಯಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಸೋಂಕು ಕಡಿಮೆ ಆಗುವವರೆಗೂ ಬಂದ್ ಮಾಡಬೇಕು’ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಗಡಿ ಮುಚ್ಚಿ: ‘ನೆರೆ ರಾಜ್ಯಗಳಾದ ಮಹಾರಾಷ್ಟ್ರ, ಕೇರಳದಲ್ಲಿ ನಿತ್ಯವೂ ಸಾವಿರಾರು ಪ್ರಕರಣ ವರದಿಯಾಗುತ್ತಿವೆ. ಕರ್ನಾಟಕಕ್ಜೆ ಹೊಂದಿಕೊಂಡಿರುವ ಈ ರಾಜ್ಯಗಳ ಗಡಿಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡಬೇಕು’ ಎಂದೂ ಅವರು ಒತ್ತಾಯಿಸಿದ್ದಾರೆ.
ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ, ನಿಜಧ್ವನಿ ಗೋವಿಂದರಾಜು, ತಾಂಡವಮೂರ್ತಿ ಇದ್ದರು.