ಮಹದೇಶ್ವರ ಬೆಟ್ಟ: ಇಲ್ಲಿನ ಪ್ರಸಿದ್ಧ ಯಾತ್ರಾಸ್ಥಳ ಮಲೆ ಮಹದೇಶ್ವರಸ್ವಾಮಿ ದೇವಾಲಯದಲ್ಲಿ ಕಡೆ ಕಾರ್ತಿಕ ಸೋಮವಾರದಂದು ವಿಶೇಷ ಪೂಜಾ ಕೈಂಕರ್ಯಗಳು ನಡೆದವು.
ಬೆಟ್ಟದ ವ್ಯಾಪ್ತಿಯಲ್ಲಿ ದಿನಪೂರ್ತಿ ಮೋಡ ಕವಿದ ವಾತಾವರಣದ ಜೊತೆಗೆ ತುಂತುರು ಮಳೆಯಾಗುತ್ತಿತ್ತು. ಇದನ್ನೂ ಲೆಕ್ಕಿಸದೆ ಸಾವಿರಾರು ಭಕ್ತರು ಮಹದೇಶ್ವರಸ್ವಾಮಿಯ ದರ್ಶನ ಮಾಡಿದರು.
ಕಡೆ ಕಾರ್ತಿಕ ಸೋಮವಾರದ ಅಂಗವಾಗಿ ಮಹದೇಶ್ವರ ಸ್ವಾಮಿಗೆ ನುಸುಕಿನಿಂದಲೇ ವಿಶೇಷ ಪೂಜೆಗಳು ನೆರವೇರಿದವು. ಬಿಲ್ವಾರ್ಚನೆ, ಮಹಾಮಂಗಳಾರತಿ, ಗಂಧದ ಅಭಿಷೇಕ, ಪುಷ್ಪಾರ್ಚನೆ, ರುದ್ರಾಭಿಷೇಕ ನೆರವೇರಿಸಿದ ಬಳಿಕ ಭಕ್ತರ ದರ್ಶನಕ್ಕೆ ಅನುವು ಮಾಡಿಕೊಡಲಾಯಿತು.
ಕಡೆ ಕಾರ್ತಿಕ ಸೋಮವಾರದ ಅಂಗವಾಗಿ ಮಹದೇಶ್ವರ ಬೆಟ್ಟದ ದೀಪದಗಿರಿ ಒಡ್ಡುವಿನಲ್ಲಿ ಮಹಾಜ್ಯೋತಿಯನ್ನು ಬೆಳಗಿಸಲಾಯಿತು
ಜಿಲ್ಲೆ ಮಾತ್ರವಲ್ಲದೇ ಹೊರ ಜಿಲ್ಲೆಗಳು, ತಮಿಳುನಾಡು ಸೇರಿದಂತೆ ಹೊರ ರಾಜ್ಯಗಳಿಂದ ಬಂದ ಸಾವಿರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ಮಹದೇಶ್ವರ ದರ್ಶನ ಮಾಡಿದರು. ವಿವಿಧ ಸೇವೆಗಳನ್ನು ಸಲ್ಲಿಸಿ ಹರಕೆ ತೀರಿಸಿದರು.
ಜಾತ್ರೆಯ ಅಂಗವಾಗಿ ದೇವಾಲಯದ ಹೊರ ಆವರಣವಲ್ಲದೇ, ಒಳಾಂಗಣದಲ್ಲೂ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು. ಮಹದೇಶ್ವರ ಸ್ವಾಮಿಗೂ ವಿಶೇಷ ಅಲಂಕಾರ ಮಾಡಲಾಗಿತ್ತು.
ದಾಸೋಹ ವ್ಯವಸ್ಥೆ: ದೇವಾಲಯಕ್ಕೆ ಭೇಟಿ ನೀಡಿದ್ದ ಭಕ್ತರಿಗೆ ದಾಸೋಹ ವ್ಯವಸ್ಥೆ (ತಿಂಡಿ) ಮಾಡಲಾಗಿತ್ತು. ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯಗಳ ವ್ಯವಸ್ಥೆಯನ್ನು ಪ್ರಾಧಿಕಾರದ ವತಿಯಿಂದ ಕಲ್ಪಿಸಲಾಗಿತ್ತು. ಕೋವಿಡ್ ಮುಂಜಾಗ್ರತಾ ಕ್ರಮವಾಗಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿತ್ತು.
ಬೆಟ್ಟಕ್ಕೆ ಭೇಟಿ ನೀಡುವವರ ಅನುಕೂಲಕ್ಕಾಗಿ ಕೆಎಸ್ಆರ್ಟಿಸಿಯು ಹೆಚ್ಚುವರಿಯಾಗಿ 100 ಬಸ್ಗಳ ಸೌಲಭ್ಯ ಕಲ್ಪಿಸಿತ್ತು.