ನಿವಾಸಿಗಳಿಗೆ ತೊಂದರೆ: ರಸ್ತೆ ಸರಿ ಇಲ್ಲದಿರುವುದರಿಂದ ಅಲ್ಲಿನ ಬಡಾವಣೆಯ ನಿವಾಸಿಗಳಿಗೆ ತೊಂದರೆಯಾಗಿದೆ. ತಾಲ್ಲೂಕಿನ ಲಕ್ಕರಸನಪಾಳ್ಯ, ಕೆಂಪನಪಾಳ್ಯ, ತಿಮ್ಮರಾಜೀಪುರ, ಕುರುಬನಕಟ್ಟೆ, ಕರಳಕಟ್ಟೆ, ಜಕ್ಕಳಿ, ಸೇರಿದಂತೆ 10 ಕ್ಕೂ ಹೆಚ್ಚು ಹಳ್ಳಿಗಳಿಗೆ ಈ ರಸ್ತೆ ಸಂಪರ್ಕ ಕಲ್ಪಿಸುತ್ತದೆ. ಪ್ರತಿನಿತ್ಯ ಈ ರಸ್ತೆಯಲ್ಲಿ ನೂರಾರು ಜನರು ಓಡಾಡುತ್ತಾರೆ. ಕಾಮಗಾರಿ ಪೂರ್ಣಗೊಳ್ಳದಿರುವುದರಿಂದ ಬೇಸಿಗೆಯಲ್ಲಿ ದೂಳಿನ ಹಾವಳಿಯಾದರೆ, ಮಳೆಗಾಲದಲ್ಲಿ ಕೆಸರಿನ ಸಮಸ್ಯೆ.
'ಸೋಮವಾರ ಮತ್ತು ಶುಕ್ರವಾರ ಕುರುಬನ ಕಟ್ಟೆಯ ದೇವಸ್ಥಾನಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಬರುತ್ತಾರೆ. ರಸ್ತೆ ಸರಿ ಇಲ್ಲದಿರುವುದರಿಂದ ಭಕ್ತರಿಗೆ ತೊಂದರೆಯಾಗುತ್ತಿದೆ. ಸ್ಥಳೀಯರ ಸಂಚಾರಕ್ಕೂ ತೊಡಕಾಗುತ್ತಿದೆ. ನಗರಸಭೆ ಅಧಿಕಾರಿಗಳು, ಜನ ಪ್ರತಿನಿಧಿಗಳು ಇತ್ತ ಗಮನಹರಿಸಿ ಕಾಮಗಾರಿ ನಡೆಸುವುದಕ್ಕೆ ಕ್ರಮ ಕೈಗೊಳ್ಳಬೇಕು' ಎಂದು ಸ್ಥಳಿಯ ನಿವಾಸಿ ಅವಿನಾಶ್ ಅವರು ಒತ್ತಾಯಿಸಿದರು.