ಚಾಮರಾಜನಗರ: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಅವರ 60ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಇದೇ 31ರಂದು ಅವರ ಅಭಿಮಾನಿ ಬಳಗವು ನಗರದಲ್ಲಿ ವಿವಿಧ ಸೇವಾ ಕಾರ್ಯಗಳನ್ನು ಹಮ್ಮಿಕೊಂಡಿದೆ.
ನಗರದ ಜೋಡಿ ರಸ್ತೆಯಲ್ಲಿರುವ ರೋಟರಿ ಭವನದಲ್ಲಿ ಕಾರ್ಯಕ್ರಮಗಳು ನಡೆಯಲಿದ್ದು, ಸ್ವಯಂ ಪ್ರೇರಿತ ರಕ್ತದಾನ ಶಿಬಿರ, ಆಯುಷ್ಮಾನ್ ಕಾರ್ಡ್ ಸ್ಥಳದಲ್ಲೇ ವಿತರಣೆ ನಡೆಯಲಿದೆ. ಸಾರ್ವಜನಿಕರಿಗೆ ಮಾಸ್ಕ್ ವಿತರಣೆ ಹಾಗೂ ಬುದ್ಧಿಮಾಂದ್ಯ ಮಕ್ಕಳಿಗೆ ಊಟದ ವ್ಯವಸ್ಥೆಯನ್ನೂ ಮಾಡಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಕಾರ್ಯಕ್ರಮದ ವಿವರಗಳನ್ನು ನೀಡಿದ ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್ ಅವರು, ‘2013ರಿಂದ ಧ್ರುವನಾರಾಯಣ ಅವರ ಅಭಿಮಾನಿ ಬಳಗದ ವತಿಯಿಂದ ಪ್ರತಿವರ್ಷವೂ ಅವರ ಹುಟ್ಟುಹಬ್ಬವನ್ನು ವಿವಿಧ ಸೇವಾ ಕಾರ್ಯಕ್ರಮಗಳ ಮೂಲಕ ಅದ್ಧೂರಿಯಾಗಿ ಆಚರಿಸಲಾಗುತ್ತಿದ್ದು, ಕಳೆದ ವರ್ಷ ಕೋವಿಡ್ ಕಾರಣಕ್ಕೆ ಸರಳವಾಗಿ ಆಚರಿಸಲಾಗಿತ್ತು. ಈ ವರ್ಷವೂ ಕೋವಿಡ್ ಇರುವುದರಿಂದ ಕೋವಿಡ್ ನಿಯಮಗಳಿಗೆ ಒಳಪಟ್ಟು, ವಿವಿಧ ಸೇವಾ ಕಾರ್ಯಗಳನ್ನು ಕೈಗೊಳ್ಳಲಾಗಿದೆ’ ಎಂದರು.
ಕಾಂಗ್ರೆಸ್ ಮುಖಂಡ ಸದಾಶಿವಮೂರ್ತಿ ಅವರು ಮಾತನಾಡಿ, ‘ಆರ್.ಧ್ರುವನಾರಾಯಣ ಅವರ ಹುಟ್ಟುಹಬ್ಬವನ್ನು ಅವರ ಅಭಿಮಾನಿ ಬಳಗ, ಪ್ರತಿವರ್ಷವೂ ವೈಶಿಷ್ಟವಾಗಿ ಆಚರಣೆ ಮಾಡಿಕೊಂಡು ಬರುತ್ತಿದೆ. ಈ ವರ್ಷವೂ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಎಲ್ಲರೂ ಸೇರಿ ಇದನ್ನು ಯಶಸ್ವಿಗೊಳಿಸಬೇಕು. ಜನ ಸಾಮಾನ್ಯರು ಆಯುಷ್ಮಾನ್ ಕಾರ್ಡ್ ವಿತರಣೆಯ ಪ್ರಯೋಜನ ಪಡೆಯಬೇಕು’ ಎಂದು ಮನವಿ ಮಾಡಿದರು.
60 ಯುನಿಟ್ ರಕ್ತದಾನದ ಗುರಿ: ‘ಈ ವರ್ಷದ್ದು 60ನೇ ವರ್ಷದ ಹುಟ್ಟುಹಬ್ಬ ಆಗಿರುವುದರಿಂದ ರಕ್ತದಾನ ಶಿಬಿರದಲ್ಲಿ 60 ಯುನಿಟ್ ರಕ್ತ ಸಂಗ್ರಹಿಸುವ ಗುರಿ ಹೊಂದಲಾಗಿದೆ. 65 ಮಂದಿ ಈಗಾಗಲೇ ನೋಂದಣಿ ಮಾಡಿಕೊಂಡಿದ್ದಾರೆ. ಇನ್ನೂ ಹಲವರು ರಕ್ತದಾನಕ್ಕೆ ಮುಂದಾಗಲಿದ್ದಾರೆ. ಕೋವಿಡ್ ಲಸಿಕೆ ಪಡೆದವರು 14 ದಿನಗಳವರೆಗೆ ರಕ್ತದಾನ ಮಾಡುವಂತಿಲ್ಲ. ಎಲ್ಲರಿಗೂ ಈ ಸೂಚನೆ ನೀಡಲಾಗಿದೆ’ ಎಂದು ರವಿಕುಮಾರ್ ಹೇಳಿದರು.
ಆರ್.ಧ್ರುವನಾರಾಯಣ ಅಭಿಮಾನಿ ಬಳಗದ ಅಧ್ಯಕ್ಷ ಕಾಗಲವಾಡಿ ಚಂದ್ರು, ಉಪಾಧ್ಯಕ್ಷ ಡಿ.ಪಿ.ಪ್ರಕಾಶ್, ಪ್ರಧಾನ ಕಾರ್ಯದರ್ಶಿ ಎಲ್ಐಸಿ ನಾಗನಾಯಕ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಅಸ್ಗರ್, ರೋಟರಿ ಅಧ್ಯಕ್ಷ ಶ್ರೀನಿವಾಸ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.