ಚಾಮರಾಜನಗರ: ಬೆಳಗಾವಿಯಲ್ಲಿ ವೀರ ಸೇನಾನಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆ ವಿರೂಪಗೊಳಿಸಿದ್ದನ್ನು ಖಂಡಿಸಿತಾಲ್ಲೂಕು ಕುರುಬರ ಸಂಘದ ಆಶ್ರಯದಲ್ಲಿ ಸಮುದಾಯದವರು ನಗರದಲ್ಲಿ ಭಾನುವಾರ ಪ್ರತಿಭಟನೆ ನಡೆಸಿದರು.
ಚಾಮರಾಜೇಶ್ವರ ಉದ್ಯಾನದ ಬಳಿ ಸೇರಿದ ಪ್ರತಿಭಟನಕಾರರು, ಅಲ್ಲಿಂದ ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿರಸ್ತೆ ಮೂಲಕ ಜಿಲ್ಲಾಡಳಿತ ಭವನದವರೆಗೆ ಮೆರವಣಿಗೆ ನಡೆಸಿದರು. ಮೆರವಣಿಗೆಯುದ್ದಕ್ಕೂ ಮಹಾರಾಷ್ಟ್ರ ಸರ್ಕಾರ, ಎಂಇಎಸ್ ವಿರುದ್ಧ ಘೋಷಣೆಗಳನ್ನು ಕೂಗಿದರು
ಜಿಲ್ಲಾಡಳಿತ ಮುಂಭಾಗ ಧರಣಿ ಕುಳಿತ ಪ್ರತಿಭಟನಕಾರರು, ‘ಪ್ರತಿಮೆ ವಿರೂಪಗೊಳಿಸಿ ರಾಯಣ್ಣ ಅವರಿಗೆ ಅವಮಾನ ಮಾಡಿರುವ ಎಂಇಎಸ್ ಕಾರ್ಯಕರ್ತರನ್ನು ಬಂಧಿಸಿ, ಅವರನ್ನು ಗಡಿಪಾರು ಮಾಡಬೇಕು. ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಯನ್ನು ಬೆಳಗಾವಿಯ ಸುವರ್ಣಸೌಧ ಮುಂಭಾಗ ಪ್ರತಿಷ್ಠಾಪನೆ ಮಾಡಬೇಕು’ ಎಂದು ಒತ್ತಾಯಿಸಿ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಕಾತ್ಯಾಯಿನಿ ದೇವಿ ಅವರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿದ ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಸಿ.ಎನ್.ಬಾಲರಾಜು, ಉಪಾಧ್ಯಕ್ಷ ಆರ್.ಉಮೇಶ್, ಮಾದಾಪುರ ರವಿಕುಮಾರ್, ಶಿವರಾಮು, ಅಮಚವಾಡಿ ಕುಮಾರ್ ಹಾಗೂ ಇತರರು, ‘ದೇಶಕ್ಕಾಗಿ ಹೋರಾಡಿದ ವೀರ ಸೇನಾನಿ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಯನ್ನು ಎಂಇಎಸ್ ಸಂಘಟನೆಯವರು ಬೆಳಗಾವಿಯಲ್ಲಿ ವಿರೂಪಗೊಳಿಸುವ ಮೂಲಕ ಅಪ್ರತಿಮ ದೇಶಭಕ್ತನಿಗೆ ಅಪಮಾನ ಮಾಡಿದ್ದಾರೆ. ಇದು ಅತ್ಯಂತ ಖಂಡನೀಯ. ರಾಜ್ಯ ಸರ್ಕಾರ ಈ ಕೂಡಲೇ ತಪ್ಪಿತಸ್ಥರ ವಿರದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು. ಎಂಇಎಸ್ನ ಪುಡಾರಿಗಳು ಸರ್ಕಾರಿ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಪೊಲೀಸರು ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಗಳನ್ನು ಕೈಗೊಳ್ಳಬೇಕು. ಎಲ್ಲ ಪುಂಡರನ್ನು ಬಂಧಿಸಿ, ಗಡಿಪಾರು ಮಾಡಬೇಕು. ಇಲ್ಲದಿದ್ದರೆ, ರಾಜ್ಯದಾದ್ಯಂತ ಹೋರಾಟ ವಿಸ್ತರಿಸಲಾಗುವುದು’ ಎಂದು ಹೇಳಿದರು.