ಚಾಮರಾಜನಗರ: ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಶನಿವಾರ ಲೋಕ ಅದಾಲತ್ ನಡೆದಿದ್ದು, ದಾಖಲೆಯ 8,441 ಪ್ರಕರಣಗಳು ಇತ್ಯರ್ಥವಾಗಿವೆ.
ನ್ಯಾಯಾಲಯದಲ್ಲಿ ಬಾಕಿ ಇದ್ದ 2,045 ಪ್ರಕರಣಗಳನ್ನು ಎರಡೂ ಪಕ್ಷಗಾರರ ಸಮ್ಮುಖದಲ್ಲಿ ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲಾಗಿದೆ. ಇದರ ಜೊತೆಗೆ 6,396 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದೆ.
ನಗರದ ಜಿಲ್ಲಾ ನ್ಯಾಯಾಲಯ, ಕೊಳ್ಳೇಗಾಲ, ಗುಂಡ್ಲುಪೇಟೆ ಹಾಗೂ ಯಳಂದೂರು ನ್ಯಾಯಾಲಯಗಳಲ್ಲೂ ಲೋಕ ಅದಾಲತ್ ನಡೆದಿದೆ.
ಹೆಚ್ಚಿನ ಪ್ರಕರಣಗಳು ವಿಲೇವಾರಿಯಾಗಿರುವುದರಿಂದ ಜನಸಾಮಾನ್ಯರಿಗೆ ಅನುಕೂಲವಾಗಿದ್ದು, ನ್ಯಾಯಾಲಯದ ಮೇಲಿನ ಪ್ರಕರಣಗಳ ಹೊರೆ ತಗ್ಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿ ಶ್ರೀಧರ ಎಂ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.