ಚಾಮರಾಜನಗರ: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಲಾರ್ ಚೆಕ್ಪೋಸ್ಟ್ ಬಳಿ ಶುಕ್ರವಾರ ರಾತ್ರಿ 8 ಗಂಟೆ ಸಮಯದಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹2,71,670 ನಗದು ಹಣವನ್ನು ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಶಿವಮೂರ್ತಿ ಎಂಬುವವರು ಬೊಲೆರೊ ವಾಹನದಲ್ಲಿ ಹಣ ಸಾಗಿಸುತ್ತಿದ್ದರು. ವಾಹನ ತಡೆದು ತಪಾಸಣೆ ನಡೆಸಿದಾಗ ಹಣ ಪತ್ತೆಯಾಗಿದೆ.
ವಿಚಾರಣೆ ಮಾಡಿದ ವೇಳೆ ಸ್ಪಷ್ಟ, ಸಮಂಜಸ ಉತ್ತರವನ್ನು ಶಿವಮೂರ್ತಿ ನೀಡದೇ ಇರುವುದರಿಂದ ಹಣ ವಶಕ್ಕೆ ಪಡೆದು ಕೊಳ್ಳೇಗಾಲದ ಉಪ ಖಜಾನೆಯಲ್ಲಿ ಇರಿಸಲಾಗಿದೆ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಶಿಲ್ಪಾ ನಾಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.