ಚಾಮರಾಜನಗರ: ಈ ಸಾಲಿನ ರಾಜ್ಯ ಬಜೆಟ್ನಲ್ಲಿ ಘೋಷಿಸಿದ್ದ, ಹದಿಹರೆಯದ ಹೆಣ್ಣುಮಕ್ಕಳಿಗೆ ಮುಟ್ಟಿನ ಕಪ್ ( ಮೆನ್ಸ್ಟ್ರುವಲ್ ಕಪ್) ವಿತರಿಸುವ ‘ಮೈತ್ರಿ ಮುಟ್ಟಿನ ಕಪ್’ ಯೋಜನೆಗೆ ಜಿಲ್ಲೆಯ ಬಿಳಿಗಿರಿರಂಗನಬೆಟ್ಟದಲ್ಲಿ ಬುಧವಾರ ಚಾಲನೆ ನೀಡಲಾಯಿತು.
ವಿವೇಕಾನಂದ ಗಿರಿಜನ ಕಲ್ಯಾಣ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಯೋಜನೆಯ ರಾಯಭಾರಿಗಳಾದ ಚಿತ್ರ ನಟಿ ಅಮೃತ ಅಯ್ಯಂಗಾರ್ ಹಾಗೂ ಕ್ರಿಕೆಟ್ ಪಟು ವೇದಾ ಕೃಷ್ಣಮೂರ್ತಿ ಅವರು ಹೆಣ್ಣುಮಕ್ಕಳಿಗೆ ಮುಟ್ಟಿನ ಕಪ್ ವಿತರಿಸಿದರು.
ಡಾ.ಕೆ.ಸುಧಾಕರ್ ಮಾತನಾಡಿ, ‘ಚಾಮರಾಜನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಜಾರಿಗೆ ತಂದಿರುವ ಯೋಜನೆಯನ್ನು ಎಲ್ಲ ಜಿಲ್ಲೆಗಳಿಗೂ ವಿಸ್ತರಿಸುವ ಚಿಂತನೆ ಇದೆ’ ಎಂದರು.
‘ಮಾತೃ ಹೃದಯದ ಬಿಜೆಪಿ ಸರ್ಕಾರವು, ಹೆಣ್ಣು ಮಕ್ಕಳ ಆರೋಗ್ಯದ ವಿಚಾರದಲ್ಲಿ ತಂದೆ– ತಾಯಂದಿರಂತೆ ಯೋಚಿಸಿ ಯೋಜನೆ ಜಾರಿಗೊಳಿಸಿದೆ. ಮಹಿಳೆಯರಿಗಾಗಿ ಪ್ರತ್ಯೇಕ ಕ್ಲಿನಿಕ್ಗಳನ್ನು ಆರಂಭಿಸಲಾಗುವುದು’ ಎಂದು ಹೇಳಿದರು.
ಸಚಿವ ಸೋಮಣ್ಣ ಮಾತನಾಡಿ, ‘ಋತುಚಕ್ರದ ಅವಧಿಯಲ್ಲಿ ಹೆಣ್ಣುಮಕ್ಕಳು ಅನುಭವಿಸುವ ನೋವನ್ನು ಅರ್ಥ ಮಾಡಿಕೊಂಡು ಸುಧಾಕರ್ ಅವರು ಯೋಜನೆ ಜಾರಿಗೊಳಿಸಿದ್ದಾರೆ’ ಎಂದರು.
‘ಮಧ್ಯಪ್ರದೇಶದ ಮಾದರಿಯಲ್ಲಿ ಯೋಜನೆಯನ್ನು ಜಾರಿಗೊಳಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್ನಲ್ಲಿ ಘೋಷಿಸಿದ್ದರು.
ಆರೋಗ್ಯ ಇಲಾಖೆಯು ಎರಡೂ ಜಿಲ್ಲೆಗಳ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಕಾಲೇಜುಗಳ 16ರಿಂದ 18 ವರ್ಷ ವಯಸ್ಸಿನ 10 ಸಾವಿರ ಹೆಣ್ಣುಮಕ್ಕಳಿಗೆ ಪರಿಸರ ಸ್ನೇಹಿಯಾದ, ಮರುಬಳಕೆ ಮಾಡಬಹುದಾದ ಕಪ್ ವಿತರಿಸಲಿದೆ. ಕಪ್ 8ರಿಂದ 10 ವರ್ಷಗಳ ಕಾಲ ಬಾಳಿಕೆ ಬರುತ್ತದೆ.