ಚಾಮರಾಜನಗರ: ಜಿಲ್ಲೆಯ ಪ್ರಸಿದ್ಧ ಯಾತ್ರಾಸ್ಥಳ ಮಹದೇಶ್ವರ ಬೆಟ್ಟದ ಮಲೆ ಮಹದೇಶ್ವರಸ್ವಾಮಿ ದೇವಾಲಯದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ನಡೆಯುವ ಜಾತ್ರೆ, ಎಣ್ಣೆ ಮಜ್ಜನ ಹಾಗೂ ವಿಶೇಷ ಪೂಜೆಗಳ ಸಂದರ್ಭದಲ್ಲಿ ಮೂರು ದಿನಗಳ ಕಾಲ ಸಾರ್ವಜನಿಕರು ಹಾಗೂ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
ಸೆ.16ರಿಂದ 18ರವರೆಗೆ ಮಹಾಲಯ ಅಮಾವಾಸ್ಯೆಯ ಜಾತ್ರೆ, ವಿಶೇಷ ಪೂಜೆಗಳು ನಡೆಯಲಿವೆ. ಪ್ರತಿ ವರ್ಷ ಈ ಸಮಯದಲ್ಲಿ ಬೆಟ್ಟಕ್ಕೆ ಸಾವಿರಾರು ಭಕ್ತರು ಭೇಟಿ ನೀಡುತ್ತಾರೆ. ಈ ವರ್ಷ ಕೋವಿಡ್–19 ಪರಿಸ್ಥಿತಿ ಇರುವುದರಿಂದ ಹೆಚ್ಚು ಜನರು ಬಂದರೆ, ಮಾರ್ಗಸೂಚಿಗಳ ಅನ್ವಯ ಭಕ್ತರ ನಿರ್ವಹಣೆ ಕಷ್ಟವಾಗಲಿದೆ.
ಭಕ್ತರ ಆರೋಗ್ಯದ ಹಿತದೃಷ್ಟಿಯಿಂದ ಸೆ.16ರಿಂದ 18ರವರೆಗೆ ದೇವಾಲಯಕ್ಕೆ ಭಕ್ತರು ಹಾಗೂ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸುವಂತೆ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ ಅವರು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರಿಗೆ ಪತ್ರ ಬರೆದಿದ್ದರು.
ಇದರ ಆಧಾರದಲ್ಲಿ ಜಿಲ್ಲಾಧಿಕಾರಿ ಅವರು ಪ್ರವೇಶಕ್ಕೆ ನಿಷೇಧ ಹೇರಿ ಆದೇಶ ಹೊರಡಿಸಿದ್ದಾರೆ.ಆದರೆ, ದೇವಸ್ಥಾನದ ಒಳ ಆವರಣದಲ್ಲಿ ಸಂಪ್ರದಾಯದಂತೆ ಅಮಾವಾಸ್ಯೆಯ ಜಾತ್ರೆ, ಎಣ್ಣೆ ಮಜ್ಜನ ಸೇವೆ ಹಾಗೂ ವಿಶೇಷ ಪೂಜೆಗಳು ಶಾಸ್ತ್ರೋಕ್ತವಾಗಿ ನಡೆಯಲಿವೆ ಎಂದು ಅವರು ತಿಳಿಸಿದ್ದಾರೆ.