ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹದೇಶ್ವರ ಬೆಟ್ಟ: 28ರಿಂದ ಏ. 2ರವರೆಗೆ ಯುಗಾದಿ ಜಾತ್ರೆ

ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ ನೇತೃತ್ವದಲ್ಲಿ ಸಭೆ
Last Updated 23 ಮಾರ್ಚ್ 2022, 16:04 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯ ಪ್ರಸಿದ್ಧ ಯಾತ್ರಾಸ್ಥಳ ಮಹದೇಶ್ವರ ಬೆಟ್ಟದಲ್ಲಿ ಇದೇ 28ರಿಂದ ಏ.2ರವವರೆಗೆ ನಡೆಯಲಿರುವ ಯುಗಾದಿ ಜಾತ್ರಾ ಮಹೋತ್ಸವಕ್ಕೆ ಸಂಬಂಧಿಸಿದಂತೆ ಮಂಗಳವಾರ ಬೆಟ್ಟದಲ್ಲಿ ಪೂರ್ವ ಸಿದ್ಧತಾ ಸಭೆ ನಡೆಯಿತು.

ಬೆಟ್ಟದ ನಾಗಮಲೆ ಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ ಅವರು, ‘ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಹಾಗೂ ಶಾಸಕರ ಸಮ್ಮುಖದಲ್ಲಿ ಈ ಹಿಂದೆಯೇ ಮಹಾಶಿವರಾತ್ರಿ ಹಾಗೂ ಯುಗಾದಿ ಜಾತ್ರೆ ಸಂಬಂಧ ಪೂರ್ವಬಾವಿ ಸಭೆ ನಡೆಸಲಾಗಿದೆ. ಶಿವರಾತ್ರಿ ಜಾತ್ರೆ ಹಾಗೂ ರಥೋತ್ಸವ ಯಶಸ್ವಿಯಾಗಿ ನಡೆದಿದೆ. ಯುಗಾದಿ ಜಾತ್ರೆ ಹಾಗೂ ರಥೋತ್ಸವನ್ನು ಅಚ್ಚುಕಟ್ಟಾಗಿ ನೆರವೇರಿಸಲು ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು’ ಎಂದು ಸೂಚಿಸಿದರು.

‘ಇದೇ 29ರಂದು ಯುಗಾದಿ ಜಾತ್ರಾ ಮಹೋತ್ಸವಕ್ಕೆ ಚಾಲನೆ ಸಿಗಲಿದೆ. 30ರಂದು ಎಣ್ಣೆಮಜ್ಜನ ವಿಶೇಷ ಸೇವೆ ಉತ್ಸವ, 31 ಹಾಗೂ ಏಪ್ರಿಲ್ 1ರಂದು ಅಮಾವಾಸ್ಯೆ ವಿಶೇಷ ಸೇವೆ ಉತ್ಸವಾದಿಗಳು ನಡೆಯಲಿವೆ. 2ರಂದು ಶನಿವಾರ ಮಹಾರಥೋತ್ಸವ ನಡೆಯಲಿದೆ’ ಎಂದರು.

‘ಕಾವೇರಿ ನೀರು ಸರಬರಾಜು ಯೋಜನೆಯಡಿ ನಿರ್ಮಿಸಿರುವ ಟ್ಯಾಂಕ್, ಶುದ್ಧ ಕುಡಿಯುವ ನೀರಿನ ಘಟಕಗಳ ಮೂಲಕ ಭಕ್ತರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಕಾಲ್ನಡಿಗೆಯಲ್ಲಿ ಕ್ಷೇತ್ರಕ್ಕೆ ಬರುವವರಿಗೂ ನೀರು ಪೂರೈಸಬೇಕು’ ಎಂದರು.

‘ಭಕ್ತಾದಿಗಳಿಗೆ ನೆರಳಿನ ವ್ಯವಸ್ಥೆ ಕಲ್ಪಿಸಲು ಶಾಮಿಯಾನ ಹಾಕಲಾಗುವುದು. ದೇವರ ದರ್ಶನಕ್ಕಾಗಿ ಸರದಿ ಸಾಲಿನಲ್ಲಿ ಸಾಗುವ ಭಕ್ತರಿಗೂ ನೆರಳಿನ ವ್ಯವಸ್ಥೆ ಮಾಡಲಾಗುವುದು. ಇತರೆ ಅವಶ್ಯಕತೆ ಕಂಡು ಬಂದ ಸ್ಥಳದಲ್ಲಿಯೂ ನೆರಳಿನ ವ್ಯವಸ್ಥೆ ಕಲ್ಪಿಸಲಾಗುವುದು. ಶೌಚಾಲಯಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಬೇಕು’ ಎಂದರು.

‘ನಿರಂತರವಾಗಿ ದಾಸೋಹ ವ್ಯವಸ್ಥೆ ಇರಲಿದೆ. ಶಿವರಾತ್ರಿ ಜಾತ್ರೆಯಲ್ಲಿ ಕೈಗೊಂಡಂತೆ ವಿಶೇಷ ದಾಸೋಹ ವ್ಯವಸ್ಥೆಯೂ ಇರಲಿದೆ.ಖಾಸಗಿ ವಾಹನಗಳು, ಕೆಎಸ್‌ಆರ್‌ಟಿಸಿ, ತಮಿಳುನಾಡಿನ ಸಾರಿಗೆ ವಾಹನಗಳಿಗೆ ನಿಲುಗಡೆ ಸೌಲಭ್ಯ ಕಲ್ಪಿಸಲಾಗಿದೆ. ಜಾತ್ರಾ ದಿನಗಳಂದು ಸ್ವಚ್ಛತಾ ಕಾರ್ಯ ನಿರ್ವಹಿಸಲು ಹೆಚ್ಚುವರಿಯಾಗಿ ಪೌರಕಾರ್ಮಿಕರನ್ನು ನಿಯೋಜಿಸಿಕೊಳ್ಳಲಾಗುತ್ತಿದೆ. ವಿಶೇಷವಾಗಿ ರಥೋತ್ಸವ ದಿನದಂದು ಹೆಚ್ಚು ಪೌರಕಾರ್ಮಿಕರನ್ನು ನಿಯೋಜಿಸಲಾಗುವುದು’ ಎಂದರು.

‘ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾರ್ಚ್ 31 ಹಾಗೂ ಏಪ್ರಿಲ್ 1ರಂದು ಏರ್ಪಾಡು ಮಾಡಬೇಕಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಜಾನಪದ ಕಲೆ, ಇತರೆ ಕಲಾ ಪ್ರಕಾರಗಳ ಕಾರ್ಯಕ್ರಮಗಳನ್ನು ಪ್ರಸ್ತುತ ಪಡಿಸುವ ನಿಟ್ಟಿನಲ್ಲಿ ಕ್ರಮಹಿಸಬೇಕಿದೆ’ ಎಂದು ತಿಳಿಸಿದರು.

ಸಾಲೂರು ಮಠದ ಶ್ರೀ ಶಾಂತ ಮಲ್ಲಿಕಾರ್ಜುನಸ್ವಾಮೀಜಿ, ಪ್ರಾಧಿಕಾರದ ಉಪಕಾರ್ಯದರ್ಶಿ ಬಸವರಾಜು, ತಹಶೀಲ್ದಾರ್ ನಾಗರಾಜು ಸೇರಿದಂತೆ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT