ಪ್ರಸಿದ್ಧ ತೀರ್ಥಕ್ಷೇತ್ರವಾಗಿರುವಮಹದೇಶ್ವರ ಬೆಟ್ಟದ ಹಲವಾರು ಜನರು ವ್ಯಾಪಾರವನ್ನೇ ತಮ್ಮ ಜೀವನವನ್ನಾಗಿಸಿಕೊಂಡಿದ್ದಾರೆ. ಸ್ಥಳೀಯರಲ್ಲಿ ಹಲವರು ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹೊರಗುತ್ತಿಗೆ ನೌಕರರಾಗಿ ಕೆಲಸ ನಿರ್ವಹಿಸಿಕೊಂಡು ಜೀವನ ನಡೆಸುತ್ತಿದ್ದರು. ಕೋವಿಡ್–19 ತಡೆಗೆ ಹೇರಲಾಗಿದ್ದ ಲಾಕ್ಡೌನ್ ಅವಧಿಯಲ್ಲಿ ದೇವಸ್ಥಾನ ಕಾರ್ಯನಿರ್ವಹಿಸದೇ ಇದ್ದುದರಿಂದ ಹೊರಗುತ್ತಿಗೆ ನೌಕರರಿಗೆ ಕೆಲಸಕ್ಕೆ ಬರದಂತೆ ಸೂಚಿಸಲಾಗಿತ್ತು. ಭಕ್ತರು ಬಾರದೇ ಇದ್ದುದರಿಂದ ಸ್ಥಳೀಯವಾಗಿ ಸಣ್ಣಪುಟ್ಟ ಅಂಗಡಿಗಳನ್ನು ಇಟ್ಟು ವ್ಯಾಪಾರ ಮಾಡಿಕೊಂಡಿದ್ದವರು ಸಂಪಾದನೆ ಇಲ್ಲದೇ ಕಷ್ಟಕ್ಕೆ ಸಿಲುಕಿದ್ದರು.