ಚಾಮರಾಜನಗರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಬೌದ್ಧ ಧರ್ಮದ ದೀಕ್ಷೆ ಪಡೆದ ಮಹಾರಾಷ್ಟ್ರದ ನಾಗಪುರ ದೀಕ್ಷಾ ಭೂಮಿ ಯಾತ್ರೆಗೆ ಜಿಲ್ಲೆಯಿಂದ ಯಾತ್ರಾರ್ಥಿಗಳು ತೆರಳಿದರು.
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿರುವ ನಾಗಪುರ ದೀಕ್ಷಾಭೂಮಿ ಯಾತ್ರೆಗೆ ನಗರದ ಜಿಲ್ಲಾಡಳಿತ ಭವನದ ಮುಂಭಾಗಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಐರಾವತ್ ಬಸ್ಗಳನ್ನು ತೆರಳಲಾಯಿತು.
ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ನಾಗಪುರ ದೀಕ್ಷಾ ಭೂಮಿ ಯಾತ್ರೆಗೆ ತೆರಳುತ್ತಿರುವ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳಿಗೆ ಶುಭ ಕೋರಿ ಚಾಲನೆ ನೀಡಿದರು.
ಬಳಿಕ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಯಾತ್ರೆಗೆ ತೆರಳಿದ ಬಸ್ಸುಗಳಿಗೆ ಚಾಲನೆ ನೀಡಿ, ಶುಭ ಹಾರೈಸಿದರು.
ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಮಾತನಾಡಿ, ‘ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ದೀಕ್ಷೆ ಪಡೆದಂತಹ ಮಹಾರಾಷ್ಟ್ರದ ನಾಗಪುರದ ದೀಕ್ಷಾ ಭೂಮಿ ಯಾತ್ರೆಗೆ ತೆರಳಲು ಅಂಬೇಡ್ಕರ್ ಅನುಯಾಯಿಗಳಿಗೆ ಅವಕಾಶ ಕಲ್ಪಿಸಿ ಸರ್ಕಾರ ಆದೇಶಿಸಿತ್ತು.ಈ ಪ್ರಕಾರ ಆನ್ಲೈನ್ನಲ್ಲಿ ಅರ್ಜಿ ಆಹ್ವಾನಿಸಿದ್ದು, 267 ಅರ್ಜಿ ಸಲ್ಲಿಕೆಯಾಗಿದೆ. ಈ ಪೈಕಿ 243 ಮಂದಿಯನ್ನು ಕಳುಹಿಸಿಕೊಡಲಾಗಿದೆ. ತಾಲ್ಲೂಕುಗಳಲ್ಲಿಯೂ ಅಂಬೇಡ್ಕರ್ ಅನುಯಾಯಿಗಳು ದೀಕ್ಷಾಭೂಮಿ ಯಾತ್ರೆಗೆ ತೆರಳಿದ್ದಾರೆ. ಸರ್ಕಾರದ ವತಿಯಿಂದ ಯಾತ್ರೆಗೆ ಅನುದಾನ ನೀಡಲಾಗಿದೆ’ ಎಂದರು.
ಇಲಾಖೆಯ ತಾಲೂಕು ಸಹಾಯಕ ನಿರ್ದೇಶಕ ಚಿಕ್ಕಬಸವಯ್ಯ, ನಗರಸಭಾ ಸದಸ್ಯ ಆರ್.ಪಿ.ನಂಜುಂಡಸ್ವಾಮಿ, ದಲಿತ ಸಂಘಟನೆಗಳ ಮುಖಂಡರಾದ ಕೆ.ಎಂ.ನಾಗರಾಜು, ಸಿ.ಎಂ.ಕೃಷ್ಣಮೂರ್ತಿ, ಸುಭಾಷ್ ಮಾಡ್ರಳ್ಳಿ, ಸೋಮವಾರಪೇಟೆ ಸಿದ್ದರಾಜು, ಮಹೇಶ್, ರವಿಚಂದ್ರಪ್ರಸಾದ್, ವಾಸು, ರಾಮಸಮುದ್ರದ ಬಾಬು, ಜಯಶಂಕರ್ ಇತರರು ಇದ್ದರು.